ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ

ಶಿವಮೊಗ್ಗ: ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಸಣ್ಣ ರಸ್ತೆ ಹೊಂಡ ಕೂಡ ಮುಚ್ಚಲು ಈ ಸರ್ಕಾರಕ್ಕೆ ಆಗುತ್ತಿಲ್ಲ. ಸುಮ್ಮನೆ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟೀಕಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಭ್ರಷ್ಟ, ಬೇಜವಾಬ್ದಾರಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ನಾನೂ ಕೂಡ ಮುಂದಿನ ವಾರದಿಂದ ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇನೆ ಎಂದರು.
ಕೇಂದ್ರ ಸರ್ಕಾರ ಟ್ರಂಪ್ ಅವರಿಗೆ ಮಣಿದಿದೆ ಮತ್ತು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಕ್ಕೆ ಟೀಕೆಗಳು ಬರುತ್ತಿವೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೋದಿ ಸರ್ಕಾರ ಈಗಾಗಲೇ ಪಾಕಿಸ್ತಾನಕ್ಕೆ ಮೇಲೆಳಲಾಗದಷ್ಟು ಹೊಡೆತ ನೀಡಿದೆ. ಭಾರತದ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ನಮ್ಮ ಸೈನಿಕರು ದೊಡ್ಡ ಸಾಧನೆ ಮಾಡಿದ್ದಾರೆ. ಈಗಾಗಲೇ ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲಾಗಿದ್ದು, ಟೀಕೆಗಳಿಗೆ ಅರ್ಥವಿಲ್ಲ. ಪಾಕಿಸ್ತಾನ ಮೂಲೆ ಗುಂಪಾಗಿದ್ದು, ಭಾರತದ ಸಾಧನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ ಎಂದರು.
ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಂಭ್ರಮಾಚರಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನಮಗೆ ಸಂಬಂಧವಿಲ್ಲ ಎಂದರು.
ಜನಾರ್ದನ್ ರೆಡ್ಡಿ ಪತ್ನಿ ಚುನಾವಣೆಗೆ ನಿಲ್ಲುತ್ತಾರೆಯೇ ಎಂಬ ಪ್ರಶ್ನೆಗೆ, ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಷ್ಟೆ ಉತ್ತರಿಸಿದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಇದ್ದರು.