ಭದ್ರಾವತಿ: ಕ್ರಿಕೆಟ್ ಆಟದಲ್ಲಿ ಉಂಟಾದ ಜಗಳ ಓರ್ವ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅರುಣ್(23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಶ್ರೀ ಅಕ್ಕ ಮಹಾದೇವಿ ವಿದ್ಯಾಸಂಸ್ಥೆ ಬಳಿ ಇರುವ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆದಿದ್ದು, ಅರುಣ್ ಮತ್ತು ಇತರರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿದೆ. ಇದೆ ಜಗಳ ರಾತ್ರಿ ಗಾಂಧಿನಗರ, ಕೇಶವಪುರ ಬಡಾವಣೆ ನೀರಿನ ಟ್ಯಾಂಕ್ ಹತ್ತಿರ ಮದ್ಯ ಸೇವಿಸುವಾಗ ಮುಂದುವರೆದಿದ್ದು, ಮಾತಿಗೆ ಮಾತು ಬೆಳೆದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಮತ್ತೊಬ್ಬ ಯುವಕ ಸಂಜಯ್ ಎಂಬಾತ ಗಾಯಗೊಂಡಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಅರುಣ್ ಸಹೋದರ ದೀಪಕ್ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ 4ಕ್ಕೂ ಹೆಚ್ಚು ಜನರ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.