ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದವರು ಸಂಸದರಾಗಿದ್ದೇ ವೇಸ್ಟ್

Advertisement

ಬೆಂಗಳೂರು: ಕರ್ನಾಟಕ ಬಿಜೆಪಿ ಪಕ್ಷದಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಲೆಗಾಗಲಿ ಏನೇನೂ ಪ್ರಯೋಜನವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿರುವ ಅವರು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್. ಕರ್ನಾಟಕ ಬಿಜೆಪಿ ಪಕ್ಷದಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಲೆಗಾಗಲಿ ಏನೇನೂ ಪ್ರಯೋಜನವಿಲ್ಲ, ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿಯವರು ಜಗ್ಗಲಿಲ್ಲ. ಬಿಜೆಪಿ ಅವರದು ಬಡವರ, ರೈತರ, ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್‍ಗಳ ಹಾರ ಹಾಕಿದಳು.
ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮಿ ಯೋಜನೆಯ ಹಣ ಹಾಗೂ ಗೃಹಜ್ಯೋತಿ ಯೋಜನೆಯಿಂದ ಉಳಿತಾಯವಾದ ಮೊತ್ತದಲ್ಲಿ ಚಿನ್ನದುಂಗುರವನ್ನು ಖರೀದಿಸಿ ಖುಷಿಪಟ್ಟರು. ಇವು ನಮ್ಮ ಯೋಜನೆಗಳ ಯಶಸ್ಸಿಗೆ ಸಾಕ್ಷಿ. ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಶಕ್ತಿ ತುಂಬಬೇಕು ಎಂದು ಮನವಿ ಮಾಡುತ್ತೇನೆ. ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ
ಬಿಜೆಪಿ ಸರ್ಕಾರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18,172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ನರೇಂದ್ರ ಮೋದಿ ಸರ್ಕಾರ ಕೇವಲ 3,454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡಿದೆ ಎಂದಿದ್ದಾರೆ.