ಬೆಳಗಾವಿ: ನಿರಂತರ ಮಳೆಯಿಂದಾಗಿ ಮಲಪ್ರಭಾ ನದಿಗೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ನೀರಿನ ರಭಸಕ್ಕೆ ಕೊಚ್ಚಿ ಹೋದ ಪರಿಣಾಮ ಬೆಳಗಾವಿ-ಗೋವಾ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿದೆ. ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. ತಾತ್ಕಾಲಿಕವಾಗಿ ಬೃಹತ್ ಪೈಪ್ನಿಂದ ಸೇತುವೆ ನಿರ್ಮಿಸಲಾಗಿತ್ತು. ಆದರೆ, ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಮಳೆ ಆರ್ಭಟ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ರಭಸಕ್ಕೆ ಸೇತುವೆ ಕೊಚ್ಚಿಕೊಂಡು ಹೋಗಿದೆ.
ಸದ್ಯ ಚೋರ್ಲಾ ಮಾರ್ಗವಾಗಿ ಗೋವಾಗೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾನಾಪುರ ಮಾರ್ಗವಾಗಿ ರಾಮನಗರದಿಂದ ಗೋವಾಗೆ ತೆರಳಬಹುದು.