ಭೀಕರ ಸರಣಿ ಅಪಘಾತ: ಆರು ಜನರ ಸಾವು

ವಿಜಯಪುರ: ಸಮೀಪದ ಮನಗೂಳಿ ಬಳಿ ಸೋಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ(ಎನ್.ಎಚ್. 50)ಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದಾರೆ.
ಮಹಿಂದ್ರಾ ಟಿಯುವಿ 300 ವಾಹನದಲ್ಲಿದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ. ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋತ್ಸ್ನಾ, ಕಾರು ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ಖಾಸಗಿ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರದ ನೋಂದಣಿ (ಎಂ.ಎಚ್.13 ಬಿಎನ್ 8364) ಇರುವ ಮಹೀಂದ್ರಾ ಟಿಯುವಿ 300 ಮತ್ತು ಖಾಸಗಿ ಬಸ್ (ಎಂ.ಎಚ್.12 ವಿಟಿ 7982) ಹಾಗೂ ಲಾರಿ(ಕೆಎ 22 ಎಎ 3117) ನಡುವೆ ಸರಣಿ ಅಪಘಾತ ಸಂಭವಿಸಿದೆ.
ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಕಾರು ಆರಂಭದಲ್ಲಿ ಹೆದ್ದಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶವಗಳನ್ನು ಹೊರತೆಗೆದು ವಿಜಯಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.