ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕು

Advertisement

ಬೆಂಗಳೂರು: ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ.
ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.
ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದರು.