ಮೂಡಿಗೆರೆ: ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣವಾದ ಎತ್ತಿನಭುಜದಲ್ಲಿ ಚಾರಣವನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧಿಸಿದೆ.
ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. 7 ಕಿ.ಮೀ. ಚಾರಣದ ಮೂಲಕ ಎತ್ತಿನಭುಜದ ಸೌಂದರ್ಯ ಸವಿಯುತ್ತಿದ್ದ ಪ್ರವಾಸಿಗರಿಗೆ ಈಗ ಒಂದು ತಿಂಗಳ ಕಾಲ ಬ್ರೇಕ್ ನೀಡಲಾಗಿದೆ.
ಈ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ರಸ್ತೆಗಳು ಜಾರುತ್ತಿದ್ದು ಕೆಲ ಮರಗಳು ಬೀಳುವ ಸ್ಥಿತಿಯಲ್ಲಿವೆ ಅಲ್ಲದೇ ಇಲ್ಲಿ ಕಾಡು ಪ್ರಾಣಿಗಳು ಹೆಚ್ಚಾಗಿರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು ಆದರಿಂದ ಇಂದಿನಿಂದ ಒಂದು ತಿಂಗಳ ಕಾಲ ಚಾರಣ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ.
ಜೊತೆಗೆ ಎತ್ತಿನಭುಜ ಪ್ರದೇಶದಲ್ಲಿ ಪ್ರವಾಸಿಗರನ್ನು ತಡೆಯಲು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಪ್ರಾಮುಖ್ಯತೆ ನೀಡಿರುವ ಅರಣ್ಯ ಇಲಾಖೆಯ ಈ ಕ್ರಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಭಾಗದಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಆಗ್ರಹಿಸುತ್ತಿದ್ದರು.