ಸೋಲಿನ ಭೀತಿಯಿಂದ ಮೋದಿ ಸರಣಿ ಸುಳ್ಳು

Advertisement

ಗೋಕಾಕ: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಸುಳ್ಳು ಹೇಳುತ್ತಿದ್ದಾರೆ. ಕಳೆದ ೧೦ ವರ್ಷಗಳಿಂದ ಕೊಟ್ಟ ಭರವಸೆ ಈಡೇರಿಸದ ಮೋದಿ, ಇದೀಗ ಚುನಾವಣೆ ವೇಳೆ ಹೊಸ ಹೊಸ ಸುಳ್ಳು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಗೋಕಾಕದ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಚುನಾವಣಾ ಪ್ರಚಾರಾರ್ಥ ನಡೆದ ಪ್ರಜಾಧ್ವನಿ-೨ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡುತ್ತಾರೆ ಎಂದು ಮೋದಿ ಸುಳ್ಳು ಹೇಳಲು ಶುರು ಮಾಡಿದ್ದಾರೆ. ಕರ್ನಾಟಕದ ಬಗ್ಗೆ ಅನೇಕ ಸುಳ್ಳು ಹೇಳುತ್ತಿದ್ದಾರೆ. ಅಧಿಕಾರಿಗಳಿಗೆ ಸಂಬಳ ಕೊಡಲು ಹಣ ಇಲ್ಲ ಎಂದು ಸುಳ್ಳು ಹೇಳಲಾಗ್ತಿದೆ. ನಾವು ಅಧಿಕಾರಕ್ಕೆ ಬಂದಾಗ ಯಾರಿಗೂ ಸಂಬಳವೇ ಆಗಿರಲಿಲ್ಲ, ಎಲ್ಲರಿಗೂ ಸಂಬಳ ಮಾಡಿ, ನಂತರ ಅಭಿವೃದ್ಧಿ ಕಾರ್ಯ ನಿಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿದರೆ ನನಗೆ ಆಶೀರ್ವಾದ ಮಾಡಿದಂತೆ ಆಗುತ್ತೆ. ಈ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ತಿಳಿದು ಬೆಳಗಾವಿ-ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.