ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ

Advertisement

ಮಂಡ್ಯ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ ಮಾಡಿ ದಹನ ಮಾಡುವ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸರ್ ಎಂ.ವಿ ಪ್ರತಿಮೆ ಬಳಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೇತೃತ್ವದಲ್ಲಿ ಪ್ರತಿಭಟನಾಕಾರರು ಧರಣಿ ನಡೆಸಿ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಷ ಹೊರ ಹಾಕಿದರು.

ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿಕೃತಿ ದಹಿಸಿ ಪ್ರಜ್ವಲ್ ರೇವಣ್ಣರನ್ನ ಕೂಡಲೇ ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಿದರು.

ಹಾಸನದಲ್ಲಿ ಪೆನ್ ಡ್ರೈವ್ ಪ್ರಕರಣ ಹೊರ ಬಂದ ನಂತರ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಇದೀಗ ವಿದೇಶಕ್ಕೆ ಪರಾರಿಯಾಗಿ ಅಡಗಿ ಕುಳಿತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯದ ಎಲ್ಲಡೆ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಆತನ ತಂದೆ ಶಾಸಕ ಎಚ್.ಡಿ.ರೇವಣ್ಣ ರವರೂ ಸಹ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿ ಬರುತ್ತಿವೆ. ಇದೀಗ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ಅವರನ್ನು ಬಂಧನ ಮಾಡಿದ್ದು, ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣನನ್ನ ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಪ್ರಕರಣದಿಂದಾಗಿ ಇಡೀ ಮಹಿಳಾ ಕುಲಕ್ಕೆ ದೊಡ್ಡ ಅವಮಾನ ಮಾಡಿರುವ ಪ್ರಜ್ವಲ್ ರೇವಣ್ಣನನ್ನು ಇಡೀ ನಾಗರಿಕ ಸಮಾಜ ಕ್ಷಮಿಸುವುದಿಲ್ಲ. , ಆತ ಮಾಡಿರುವ ಕೃತ್ಯಕ್ಕೆ ಜನರು ಕ್ಷಮಿಸುವುದಿಲ್ಲ. ಆತನನ್ನು ಶೀಘ್ರವಾಗಿ ಬಂಧಿಸಿ ವಿಚಾರಣೆ ನಡೆಸಬೇಕು. ಇಲ್ಲವಾದಲ್ಲಿ ಅವರು ಸಾಕ್ಷಿ ನಾಶಕ್ಕೆ ಮುಂದಾಗಬಹುದು. ಅದಕ್ಕೆ ತನಿಖಾಧಿಕಾರಿಗಳು ಅವಕಾಶ ಮಾಡಿಕೊಡದೆ, ಶಿಕ್ಷೆ ನೀಡಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ಇಂದಿರಾ ಸತೀಶ್ ಬಾಬು, ಅನುರಾಧ, ವೀಣಾ, ಶಕುಂತಲಾ, ಶಾಂಭವಿ, ನಗರಸಭಾ ಸದಸ್ಯರಾದ ಗೀತಾ. ಶ್ರೀಧರ್, ಸಿಎಂ ದ್ಯಾವಪ್ಪ, ಪ್ರಶಾಂತ್ ಬಾಬು, ಕನ್ನಲಿ ಚೆನ್ನಪ್ಪ ಸೇರಿದಂತೆ ಇತರರು ನೇತೃತ್ವ ವಹಿಸಿದ್ದರು.