SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಚಾರ್ಮಾಡಿ ಘಾಟಿಯಲ್ಲಿ ಗುಡ್ಡದಿಂದ ಕಲ್ಲುಗಳ ಕುಸಿತ

ಚಾರ್ಮಾಡಿ ಘಾಟಿಯಲ್ಲಿ ಗುಡ್ಡದಿಂದ ಕಲ್ಲುಗಳ ಕುಸಿತ

0
24

ಮೂಡಿಗೆರೆ: ದಕ್ಷಿಣ ಕನ್ನಡ ಮತ್ತು ಕಾಫಿನಾಡನ್ನು ಸಂಪರ್ಕಿಸುವ ಪ್ರಮುಖ ಕೊಂಡಿ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿಯ ರಸ್ತೆ ಪಕ್ಕದ ಎತ್ತರದ ಗುಡ್ಡದಿಂದ ಸಣ್ಣ ಪ್ರಮಾಣದಲ್ಲಿ ಕಲ್ಲುಗಳು ಜರಿದಿವೆ.

ಕಳೆದ ಒಂದು ತಿಂಗಳಿನಿಂದ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿದ ಪರಿಣಾಮ ಭೂಮಿಯ ತೇವಾಂಶ ಹೆಚ್ಚಾದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ವಾಹನಗಳಿಗೆ ಹಾನಿಯಾಗಿಲ್ಲ ಹಾಗೂ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿಲ್ಲ.

ಇತ್ತೀಚೆಗಷ್ಟೇ ಮುಂಗಾರು ಮಳೆಗಾಲ ಆರಂಭಗೊಂಡಿದ್ದು, ಇನ್ನೂ ಮೂರು ತಿಂಗಳ ಕಾಲ ಮಳೆ ಆರ್ಭಟಿಸುವ ಸಂದರ್ಭದಲ್ಲಿ ಚಾರ್ಮಾಡಿ ಘಾಟ್ ಸೇರಿದಂತೆ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತದ ಭೀತಿ ಎದುರಾಗಿದೆ.

ಎರಡು ದಿನಗಳ ಹಿಂದಷ್ಟೇ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಚಾರ್ಮಾಡಿ ಘಾಟ್‌ನ ಸಂಭವನೀಯ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಸಣ್ಣ ಪ್ರಮಾಣದಲ್ಲಿ ಕಲ್ಲುಗಳು ಜರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸಬೇಕಿದೆ.