ಬೆಂಗಳೂರು: ಇತ್ತೀಚೆಗೆ ನೇರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ಉಂಟಾಗಿದ್ದ ವ್ಯತ್ಯಯದಿಂದಾಗಿ ಪ್ರಯಾಣಿಕರು ಪರದಾಡಿದ್ದು, ಕೆಲವರು ಬೇರೆ ಬೇರೆ ವಾಹನದ ಮೂಲಕ ಪ್ರಯಾಣಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದಂತೆಯೇ, ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ನಡೆದ ಮತ್ತೊಂದು ಘಟನೆ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಸ್ಪಷ್ಟನೆ ನೀಡಿದೆ.
ಬಿಎಂಆರ್ಸಿಎಲ್ ಬಿಡುಗಡೆ ಮಾಡಿರುವ ಪ್ರಾಥಮಿಕ ತನಿಖಾ ವರದಿ ಪ್ರಕಾರ, ಜೂನ್ 25ರಂದು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಬಾಗಿಲು ಸರಿಯಾಗಿ ಮುಚ್ಚದ ಹಿನ್ನೆಲೆಯಲ್ಲಿ ಸಂಜೆ 7.36ರಿಂದ 7.54ರವರೆಗೆ, ಅಂದರೆ ಸುಮಾರು 18 ನಿಮಿಷಗಳ ಕಾಲ ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿತ್ತು.
ಇದನ್ನೂ ಓದಿ: ಧರ್ಮಸ್ಥಳ: ಅಪಪ್ರಚಾರಕ್ಕೆ ಪೂರ್ಣವಿರಾಮ – ವಿಜಯೇಂದ್ರ ಪ್ರತಿಕ್ರಿಯೆ
ಈ ಘಟನೆಯ ಕುರಿತು ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ನಡೆಸಿದ ತನಿಖೆಯಲ್ಲಿ, ಪ್ರಯಾಣಿಕರೊಬ್ಬರ ಲೋಹದ ಸರ (ಮೆಟಲ್ ಚೈನ್) ರೈಲಿನ ಬಾಗಿಲಿನ ಡೋರ್ ಗೈಡ್ವೇನಲ್ಲಿ ಸಿಲುಕಿಕೊಂಡಿದ್ದೇ ಸಮಸ್ಯೆಗೆ ಕಾರಣ ಎಂಬುದು ಪತ್ತೆಯಾಗಿದೆ. ಈ ಕಾರಣದಿಂದ ಬಾಗಿಲುಗಳು ಸಂಪೂರ್ಣವಾಗಿ ಮುಚ್ಚಲು ಸಾಧ್ಯವಾಗದೆ, ರೈಲು ಸಂಚಾರದಲ್ಲಿ ತಾತ್ಕಾಲಿಕ ವಿಳಂಬ ಉಂಟಾಯಿತು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಇದಲ್ಲದೆ, ರೈಲು ಹಾಗೂ ಅದರ ಬಾಗಿಲಿನ ವ್ಯವಸ್ಥೆಯ ಸಮಗ್ರ ತಾಂತ್ರಿಕ ಪರಿಶೀಲನೆ ನಡೆಸಲಾಗಿದ್ದು, ರೈಲಿನ ಉಪಕರಣಗಳಲ್ಲಿ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ ಎಂಬುದು ದೃಢಪಟ್ಟಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ತಾಂತ್ರಿಕ ನಿರ್ವಹಣೆ ಹಿನ್ನೆಲೆ: ಇಂದು ಇಡೀ ದಿನ KEA ಹೆಲ್ಪ್ಲೈನ್ ಬಂದ್
ಇತ್ತೀಚಿನ ದಿನಗಳಲ್ಲಿ ಮೆಟ್ರೋ ಸೇವೆಯಲ್ಲಿ ಪದೇ ಪದೇ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಮೂಡಿದ್ದು, ಈ ಘಟನೆ ಮಾನವೀಯ ಅಜಾಗರೂಕತೆಯಿಂದ ಸಂಭವಿಸಿದೆ ಎಂದು ಬಿಎಂಆರ್ಸಿಎಲ್ ಹೇಳಿದೆ. ಪ್ರಯಾಣಿಕರು ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಹಾಗೂ ಬಾಗಿಲು ಮುಚ್ಚುವ ವೇಳೆ ಎಚ್ಚರಿಕೆ ವಹಿಸುವಂತೆ ಸಂಸ್ಥೆ ಮನವಿ ಮಾಡಿದೆ.






















