ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್)ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮೂರು ದಿನಗಳ ಮಹತ್ವದ ಸಭೆ ಹಲವಾರು ವಿಷಯಗಳ ಚಿಂತನ – ಮಂಥನದೊಂದಿಗೆ ಭಾನುವಾರ ಮುಕ್ತಾಯಗೊಂಡಿತು.
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ಕಾಣಿಕೆ ಪೆಟ್ಟಿಗೆಯ ಹಣ ಎಣಿಕೆ ಅಕ್ರಮದ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದು ತೀವ್ರ ಕಳವಳ ವ್ಯಕ್ತಪಡಿಸಲಾಯಿತು.
ರಾಮಮಂದಿರದ ಬಗ್ಗೆ ದೇಶದ ಕೋಟ್ಯಂತರ ಭಕ್ತರು ಹೊಂದಿರುವ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆ ತರುವಂತಹ ಘಟನೆ. ಇದು ಮತ್ತೆಂದೂ ಮರುಕಳಿಸದಂತೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಭೆ ನಿರೀಕ್ಷಿಸಿದೆ.
ಟ್ರಸ್ಟ್ನ ಮನವಿಯ ಮೇರೆಗೆ ಆರಂಭಿಸಿರುವ ವಿಶೇಷ ತನಿಖಾ ತಂಡ ಹಾಗೂ ಪೊಲೀಸ್ ತನಿಖೆ ನಿರ್ಣಾಯಕ ಹಂತ ತಲುಪಲಿದೆ ಎಂಬ ವಿಶ್ವಾಸವನ್ನೂ ಸಭೆ ವ್ಯಕ್ತಪಡಿಸಿದೆ.
ಸರಸಂಘಚಾಲಕ ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ದೇಶದ ವಿವಿಧ ಭಾಗಗಳ 226 ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.





















