ದಾವಣಗೆರೆ: ನಗರ ದೇವತೆ ಶ್ರೀದುರ್ಗಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು. ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರಬರಲಿದೆ ಎಂದು ದೇವಸ್ಥಾನ ಟ್ರಸ್ಟ್ ಧರ್ಮದರ್ಶಿ ಹಾಗೂ ಕಾರ್ಯಾಧ್ಯಕ್ಷ ಎಸ್.ಎಸ್. ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದರು.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ದೇವಸ್ಥಾನದ ಆಡಳಿತ ಮತ್ತು ಪೂಜಾ ಕಾರ್ಯಗಳಲ್ಲಿ ಪ್ರತಿಯೊಂದಕ್ಕೂ ತನ್ನದೇ ಆದ ರೀತಿ, ನೀತಿ ಹಾಗೂ ಧರ್ಮವಿದೆ. ಪೂಜಾರಿಗಳಿಂದ ಆಭರಣಗಳು ಕಳವಾಗಿವೆ ಎಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಕಮಿಟಿ ಸಭೆ ಕರೆದು ಪರಿಶೀಲನೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಮುಗಿದ ನಂತರವೇ ಸಂಪೂರ್ಣ ಸತ್ಯಾಂಶ ಹೊರ ಬರಲಿದೆ ಎಂದು ಸ್ಪಷ್ಟಪಡಿಸಿದರು.
ಪೂಜಾರಿಗಳಿಗೆ ನಿರ್ದಿಷ್ಟ ಅವಧಿಗೆ ಆಭರಣಗಳ ಉಸ್ತುವಾರಿ ನೀಡಲಾಗಿತ್ತು. ಹಸ್ತಾಂತರದ ಸಮಯದಲ್ಲಿ 5 ರಿಂದ 6 ಚಿನ್ನದ ಆಭರಣಗಳು (ಆಭರಣಗಳ ವಸ್ತುಗಳು) ಕೊರತೆಯಾಗಿರುವುದು ಕಂಡು ಬಂದಿದೆ. ಸಾರ್ವಜನಿಕರ ಹಣ ಮತ್ತು ದೇವಸ್ಥಾನದ ಸ್ವತ್ತನ್ನು ರಕ್ಷಿಸುವುದು ನಮ್ಮ ಆದ್ಯತೆ. ಆಡಳಿತ ಮಂಡಳಿಯು ಬಿಗಿಯಾಗಿ ಕಾರ್ಯಾಚರಣೆ ನಡೆಸಲಿದ್ದು, ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಯಾರೂ ಕೂಡ ಈ ಪ್ರಕರಣದಲ್ಲಿ ರಾಜಕಾರಣ ಮಾಡಬಾರದು ಎಂದರು.





















