ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದ್ದು, 20 ನೂತನ ಸಚಿವರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೆಸರಿನಲ್ಲಿ ಪತ್ರ ರವಾನೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ಸಚಿವ ಸಂಪುಟ ವಿಸ್ತರಣೆಗೆ ಅನುಮೋದನೆ ನೀಡಿರುವುದಾಗಿ ತಿಳಿಸಲಾಗಿದೆ.
ಹೊಸ ಪಟ್ಟಿಯಲ್ಲಿ ಒಟ್ಟು 20 ಸಚಿವರಿಗೆ ಅವಕಾಶ ಕಲ್ಪಿಸಲಾಗಿದ್ದು, ಇವರಲ್ಲಿ 13 ಮಂದಿ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೆ ಮಾತ್ರ ಅವಕಾಶ ದೊರೆತಿದ್ದು, ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ ಬಾರಿ ಅವಕಾಶ ಸಿಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಹೊಸ ಸಚಿವರು ಸೋಮವಾರ ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ತೀವ್ರ ಲಾಬಿ, ಊಹಾಪೋಹ ಮತ್ತು ರಾಜಕೀಯ ಚಟುವಟಿಕೆಗಳು ನಡೆದಿದ್ದವು. ಯಾವುದೇ ಅಸಮಾಧಾನ ಅಥವಾ ಆಕ್ಷೇಪಗಳಿಗೆ ಅವಕಾಶ ನೀಡದ ಉದ್ದೇಶದಿಂದ ಅಂತಿಮ ಪಟ್ಟಿಯನ್ನು ಸೋಮವಾರ ಬೆಳಗ್ಗೆಯವರೆಗೆ ಗೌಪ್ಯವಾಗಿರಿಸಲಾಗಿತ್ತು.
ಅಧಿಕೃತ ಪಟ್ಟಿಯ ಪ್ರಕಾರ ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ.ಎಸ್. ಬಸವಣ್ಣಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ.ಜೆ. ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಚ್.ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ್ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಸಚಿವ ಸಂಪುಟದ ಜೊತೆಗೆ ವಿಧಾನಮಂಡಲದ ಪ್ರಮುಖ ಹುದ್ದೆಗಳಿಗೂ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿದೆ. ವಿಧಾನಸಭೆಯ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್, ಉಪಸಭಾಧ್ಯಕ್ಷರಾಗಿ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ನೇಮಕ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ರಾಜ್ಯದ ಆಡಳಿತಕ್ಕೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಈ ಸಂಪುಟ ವಿಸ್ತರಣೆ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ ಸಚಿವ ಸ್ಥಾನ ವಂಚಿತರಾದ ಶಾಸಕರ ಪ್ರತಿಕ್ರಿಯೆ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.






















