ಚಿಕ್ಕಮಗಳೂರು: ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ ₹2 ಲಕ್ಷ ಸ್ವೀಕರಿಸುತ್ತಿದ್ದ ಇಬ್ಬರು ಸರ್ವೇಯರ್ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಸರ್ವೇಯರ್ಗಳಾದ ದೊರೆರಾಜ್ ಹಾಗೂ ರಂಗನಾಥ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದವರು. ಚಿಕ್ಕಮಗಳೂರು ನಗರದ ಹೊರವಲಯದ ಇಂದಾವರ ಗ್ರಾಮದ ಧರಣೇಶ್ ಎಂಬುವವರ ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು ಇಬ್ಬರು ಅಧಿಕಾರಿಗಳು ₹10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಸಂಬಂಧ ಧರಣೇಶ್ ಅವರು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಸರ್ವೇಯರ್ಗಳು ತಮ್ಮ ಖಾಸಗಿ ಕಚೇರಿಯಲ್ಲಿ ₹2 ಲಕ್ಷ ಮುಂಗಡ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಪಿ. ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಳ್ಳಲಾಗಿದೆ.






















