ಕೊಪ್ಪಳ: ಕೇಂದ್ರ ಸಂಪುಟದಲ್ಲಿರುವ 26 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಅವರಲ್ಲಿ ಮೂವರ ವಿರುದ್ಧ ಅತ್ಯಾಚಾರ ಪ್ರಕರಣಗಳಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೇವಲ ಆರೋಪ ಕೇಳಿಬಂದಿರುವ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕೇಳುತ್ತಿರುವ ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮೊದಲು ತಮ್ಮ ಸಂಪುಟದಲ್ಲಿರುವವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.
ಪ್ರಕರಣ ದಾಖಲಾಗಿರುವ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಬಿ. ನಾಗೇಂದ್ರ ಅವರ ಮೇಲಿನ ಆರೋಪ ಸಾಬೀತಾದರೆ ಅವರು ಒಂದು ಕ್ಷಣವೂ ಸಚಿವ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧವೂ ವಿವಿಧ ಪ್ರಕರಣಗಳಿವೆ. ನೈತಿಕತೆ ಇದ್ದರೆ ಮೊದಲು ಅಂತಹವರ ವಿರುದ್ಧ ಕ್ರಮ ಕೈಗೊಂಡು ಬಳಿಕ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ತಂಗಡಗಿ ಹೇಳಿದರು.





















