ಮಂಗಳೂರು: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ ಒಂದರಲ್ಲಿ ಶನಿವಾರ (ಸೆಪ್ಟೆಂಬರ್ 5) ತಡರಾತ್ರಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬಸ್ನಲ್ಲಿದ್ದ ಎಲ್ಲಾ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಘಟನೆಯ ವಿವರ: ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಬಸ್, ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ ರಸ್ತೆಯ ಎರ್ಮಾಯಿಲ್ ಎಂಬಲ್ಲಿ ತಲುಪಿದಾಗ ತಡರಾತ್ರಿ ಈ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಸ್ನಲ್ಲಿ ಹಠಾತ್ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದೆ. ಇದನ್ನು ತಕ್ಷಣವೇ ಗಮನಿಸಿದ ಬಸ್ ಚಾಲಕ, ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ತಕ್ಷಣವೇ ಕೆಳಗಿಳಿಯುವಂತೆ ಸೂಚನೆ ನೀಡಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯ ನಿರ್ಧಾರದಿಂದಾಗಿ, ಬೆಂಕಿ ಇಡೀ ಬಸ್ಗೆ ಆವರಿಸುವ ಮುನ್ನವೇ ಎಲ್ಲಾ 37 ಪ್ರಯಾಣಿಕರು ಸುರಕ್ಷಿತವಾಗಿ ಹೊರಬರಲು ಸಾಧ್ಯವಾಯಿತು. ನೋಡನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದ್ದು, ಸಂಪೂರ್ಣವಾಗಿ ಭಸ್ಮಗೊಂಡಿದೆ.
ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಬಸ್ ಸಿಬ್ಬಂದಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು ಕಡಬ ಪೊಲೀಸ್ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.






















