ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡಗೆ ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಅವರ ಬ್ಯಾರಕ್ ಬದಲಾಯಿಸುವಂತೆ ಬೆಂಗಳೂರಿನ 59ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಪ್ರಸ್ತುತ ತಮಗೆ ನೀಡಲಾಗಿರುವ ಬ್ಯಾರಕ್ನಲ್ಲಿ 20ರಿಂದ 30 ಮಂದಿ ಕೈದಿಗಳಿದ್ದು, ಕೇವಲ ಎರಡು ಶೌಚಾಲಯಗಳಿವೆ. ಈ ಪೈಕಿ ಒಂದು ಶೌಚಾಲಯ ದುರಸ್ತಿಯಲ್ಲಿದೆ. ಇದರಿಂದ ಸ್ವಚ್ಛತೆಯ ಸಮಸ್ಯೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಸೋಂಕು ಮತ್ತು ಅಲರ್ಜಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಪವಿತ್ರಾ ಗೌಡ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.
ತಮ್ಮ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಪ್ರಸ್ತುತ ಬ್ಯಾರಕ್ ಬದಲಾಯಿಸಿ, ಸೂಕ್ತ ಸೌಲಭ್ಯಗಳಿರುವ ಮತ್ತೊಂದು ಬ್ಯಾರಕ್ಗೆ ಸ್ಥಳಾಂತರಿಸುವಂತೆ ಅವರು ಮನವಿ ಮಾಡಿದ್ದರು.
ಅರ್ಜಿಯನ್ನು ಪರಿಶೀಲಿಸಿದ 59ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಪವಿತ್ರಾ ಗೌಡ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಬೇರೆ ಬ್ಯಾರಕ್ಗೆ ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದು, ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆ ಮುಂದುವರಿದಿದೆ.




















