ಮೂಡುಬಿದಿರೆ: ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಸಾಣೂರಿನ ಚಿಲಿಂಬಿ ಸಮೀಪ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ರೈ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಸಚಿವ ರಮಾನಾಥ್ ರೈ ಅವರು ಮೂಡುಬಿದಿರೆಯಿಂದ ಕಾರ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ವಿಶಾಲ್ ಎಂಬ ಹೆಸರಿನ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ರಮಾನಾಥ್ ರೈ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ.
ಸ್ಥಳೀಯರ ಸಮಯಪ್ರಜ್ಞೆ – ತಕ್ಷಣದ ರಕ್ಷಣೆ: ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಜಗದೀಶ್, ಶಿಶಿರ್ ಹಾಗೂ ಸ್ಥಳೀಯರು ಹರಸಾಹಸ ಪಟ್ಟು ಕಾರಿನೊಳಗೆ ಸಿಲುಕಿಕೊಂಡಿದ್ದ ಮಾಜಿ ಸಚಿವ ರಮಾನಾಥ್ ರೈ ಮತ್ತು ಅವರ ಚಾಲಕನನ್ನು ಹೊರತೆಗೆದರು. ಬಳಿಕ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ರಮಾನಾಥ್ ರೈ ಹಾಗೂ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.






















