ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ

0
18

ಬೆಂಗಳೂರು: ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ, ವಿಪಕ್ಷಗಳ ಘಟಬಂಧನ ವಿಷಯವಾಗಿ ಸರಣಿ ಟ್ವೀಟ್ ಮಾಡಿರುವ ಅವರು “ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕರ್ನಾಟಕ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನಡೆಯುವುದು ಎಂದರೆ ಇದೇನಾ? ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ. ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ, ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ. ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಹಾಡಿದೆ 135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ” ಎಂದಿದ್ದಾರೆ.

Previous articleಅಸ್ತಿ ಪಂಜರವಾದ ಜವಳಿ ಸೇವಾ ಕೇಂದ್ರ
Next articleಕೇರಳ ಮಾಜಿ ಸಿಎಂ ನಿಧನ