ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂದೆ ೨ಎ ಮೀಸಲಾತಿಗೆ ಸಂಬಂಧಪಟ್ಟಂತೆ ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿ, ಪೊಲೀಸ್ ವಾಹನಗಳ ಮೇಲೆ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಪಟ್ಟಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಳಗಾವಿಯಲ್ಲಿ ೨ಎ ಮೀಸಲಾತಿ ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ೧೭ ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಮತ್ತು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಕಲ್ಲು ತೂರಿದವರ ಮೇಲೆ ಇದೀಗ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಿಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಕೇಸ್ ದಾಖಲಿಸಿಕೊಳ್ಳಲಾಗಿದೆ.