ನವದೆಹಲಿ: ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವೀಂದರ್ ದುಡೇಜಾ ಅವರು ಈ ಆದೇಶ ನೀಡಿದ್ದಾರೆ.
ಇಡಿ ಸಲ್ಲಿಸಿದ್ದ ಚಾರ್ಜ್ಶೀಟ್ ಅನ್ನು ಸ್ವೀಕರಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಮೇಲ್ಮನವಿಯ ವಿಚಾರಣೆ ವೇಳೆ, ಗಾಂಧಿ ಕುಟುಂಬ ಹಾಗೂ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಮಾರ್ಚ್ 12ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ: ದ್ವೇಷ ಭಾಷಣ ಮಸೂದೆ ವಿರುದ್ಧ ಬಿಜೆಪಿ ಆರೋಪ ಹಾಸ್ಯಾಸ್ಪದ : ಸಿದ್ದರಾಮಯ್ಯ
ಈ ಹಿಂದೆ ವಿಚಾರಣಾ ನ್ಯಾಯಾಲಯ, ಎಫ್ಐಆರ್ ದಾಖಲಾಗದೆ ಇದ್ದರೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ, ಇಡಿ ಸಲ್ಲಿಸಿದ್ದ ದೂರು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಇಡಿ ವಾದದ ಪ್ರಕಾರ, ಹಣಕಾಸು ಅಕ್ರಮದ ಮೂಲ ಅಪರಾಧ (ಪ್ರೆಡಿಕೇಟ್ ಆಫೆನ್ಸ್) ಇದ್ದಲ್ಲಿ ಪ್ರತ್ಯೇಕ ಎಫ್ಐಆರ್ ಇಲ್ಲದಿದ್ದರೂ ಪಿಎಂಎಲ್ಎ ಅಡಿಯಲ್ಲಿ ತನಿಖೆ ನಡೆಸಲು ಅವಕಾಶವಿದೆ. ಇದೇ ವಿಚಾರವನ್ನು ಮುಂದಿಟ್ಟು ಇಡಿ ಮೇಲ್ಮನವಿ ಸಲ್ಲಿಸಿದೆ.





















