Home ನಮ್ಮ ಜಿಲ್ಲೆ ಬೀದರ್ ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

0
2

ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿನಲ್ಲಿ ನಿಧನರಾದರು.

ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಭೀಮಣ್ಣ ಖಂಡ್ರೆ ಅವರನ್ನು ನೋಡಿ, ಆರೋಗ್ಯ ವಿಚಾರಿಸಿದ್ದರು. ಹಲವರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಭೀಮಣ್ಣ ಖಂಡ್ರೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.

103 ವರ್ಷಗಳ ಸಾರ್ಥಕ ಹಾಗೂ ತುಂಬು ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ ಅವರು ಇಂದು ಎಲ್ಲರನ್ನೂ ಅಗಲಿದ್ದಾರೆ. ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮತ್ತು ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಕುಮಾರ ಖಂಡ್ರೆ ಸೇರಿ ಇಬ್ಬರು ಗಂಡು ಮಕ್ಕಳು ಹಾಗೂ ನಾಲ್ವರು ಪುತ್ರಿಯರಿದ್ದಾರೆ. ಇವರ ಮತ್ತೊಬ್ಬ ಪುತ್ರ ಮಾಜಿ ಶಾಸಕ ಡಾ. ವಿಜಯಕುಮಾರ್ ಖಂಡ್ರೆ 2019ರಲ್ಲಿ ನಿಧನಹೊಂದಿದ್ದರು.

ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿ ಬಡಜನರಿಗೆ ರೈತರಿಗೆ ನ್ಯಾಯ ಕೊಡಿಸುವ ಮೂಲಕ ಜನನಾಯಕರಾಗಿ ಹೊರಹೊಮ್ಮಿ, 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ್ದರು.

1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, 4 ಬಾರಿ ಶಾಸಕರಾಗಿ, 2 ಬಾರಿ ವಿಧಾನಪರಿಷತ್ ಸದಸ್ಯರಾಗಿ, ಎಂ. ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1976ರಲ್ಲಿ ಕೆಲವು ಅಧಿಕಾರಿಗಳು ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮದಡಿ ಬಲವಂತದಿಂದ ಯುವಜನರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸುತ್ತಿದ್ದುದನ್ನು ಖಂಡಿಸಿ, ತಾವೇ ಜನರ ಮನವೊಲಿಸಿ ಒಂದೇ ದಿನದಲ್ಲಿ 2500ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮನವೊಲಿಸಿ ಒಂದೇ ದಿನ ಒಂದೇ ನಗರದಲ್ಲಿ ನಡೆದ ಅತಿ ಹೆಚ್ಚು ಸಂತಾನ ಹರಣ ಶಸ್ತ್ರಚಿಕಿತ್ಸೆಯ ದಾಖಲೆ ಸೃಷ್ಟಿಸಿದ್ದರು.

ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಭೀಮಣ್ಣ ಖಂಡ್ರೆ ಅವರು, ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯ ಸೇನಾನಿಯಾಗಿ, ಹೈದ್ರಾಬಾದ್ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ತಮ್ಮ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದರು.

ಶತಾಯುಷಿ ಲೋಕನಾಯಕ: ಬಾಲ್ಯದಲ್ಲಿ ತೀವ್ರ ಅನಾರೋಗ್ಯಪೀಡಿತರಾದಾಗ ಮುಚಳಂಬದ ಸದ್ಗುರು ಶ್ರೀ ನಾಗಭೂಷಣ ಶಿವಯೋಗಿಗಳಿಂದ ಯೋಗ ಕಲಿತು ನಿತ್ಯ ಯೋಗ, ಪ್ರಾಣಾಯಾಮ ಹಾಗೂ ಇಷ್ಟಲಿಂಗ ಪೂಜೆ ಮಾಡುತ್ತಾ, ಶುದ್ಧ ಸಸ್ಯಾಹಾರವನ್ನಷ್ಟೇ ಸ್ವೀಕರಿಸುತ್ತಿರುವುದೇ ತಮ್ಮ ಶತಾಯುಷ್ಯದ ಗುಟ್ಟು ಎಂದು ಹೇಳುತ್ತಿದ್ದ ಭೀಮಣ್ಣಖಂಡ್ರೆ ಅವರು ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರ ಪರಮ ಭಕ್ತರಾಗಿದ್ದರು. ಭೀಮಣ್ಣ ಖಂಡ್ರೆ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಪಟ್ಟದ್ದೇವರು ಭೀಮಣ್ಣ ಅವರಿಗೆ ಲೋಕನಾಯಕ ಎಂಬ ಬಿರುದು ನೀಡಿದ್ದರು.

ಸಂಜೆ ಅಂತ್ಯಕ್ರಿಯೆ: ಶನಿವಾರ ಬೆಳಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.