ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರೆ, ದುಗ್ಗಾವತ್ತಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂ ಕಬಳಿಕೆ, ರೈತರ ಬಲವಂತ ಒಕ್ಕಲೆಬ್ಬಿಸುವಿಕೆ ವಿರುದ್ಧ ದೂರು ನೀಡಿದರೂ ಕಾನೂನು ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅವ್ಯವಹಾರ ನಡೆಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ತಿಳಿಸಿದರು.
ಜಿಎಂಐಟಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿಯೇ ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದೇನೆ. ಎರಡು ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಿದ್ದರೂ ಈವರೆಗೂ ಅಧಿಕಾರಿಗಳು ವರದಿ ಸಲ್ಲಿಸಿಲ್ಲ. ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಬೇಕಾದ ಮುಖ್ಯ ಕಾರ್ಯದರ್ಶಿ ನಿರ್ಲಕ್ಷ್ಯ ತೋರಿದ್ದಾರೆ. ಅಧಿಕಾರಿಗಳು ಸಚಿವ ಮಲ್ಲಿಕಾರ್ಜುನ್ ಒತ್ತಡಕ್ಕೆ ಮಣಿದಿರುವ ಅನುಮಾನವಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಚರ್ಚಿಸಿ, ರಾಜ್ಯಪಾಲರಿಗೂ ದೂರು ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ: ನಾನು ಮುಂದಿನ ಚುನಾವಣೆಯ ಸಿಎಂ ಆಕಾಂಕ್ಷಿ
ರೈತರ ಭೂಮಿ ಕಬಳಿಕೆ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದೇನೆ. ಸಂಬಂಧಪಟ್ಟ ದಾಖಲೆಗಳನ್ನೂ ನೀಡಿದ್ದೇನೆ. ಆದರೂ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇಂತಹ ಕೆಟ್ಟ ವ್ಯವಸ್ಥೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ. ಜಿಲ್ಲಾಡಳಿತವೂ ಈ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ. ಮುಖ್ಯ ಕಾರ್ಯದರ್ಶಿಗಳೇ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದರೂ, ದಾವಣಗೆರೆಯ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಕಂದಾಯ ಇಲಾಖೆ, ಅರಣ್ಯ ಇಲಾಖೆಗೆ ಸೇರಿದ ಜಾಗ, ಹಳ್ಳಗಳನ್ನು ಮುಚ್ಚಿರುವ ಕುರಿತಂತೆ ಈವರೆಗೆ ಸಮರ್ಪಕವಾದ ಉತ್ತರ ಬಂದಿಲ್ಲ, ಕ್ರಮವೂ ಆಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.









