ಧಾರವಾಡ: ಪರಿಶಿಷ್ಟ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳ ಶುಲ್ಕ ಹೆಚ್ಚಿಸಿರುವುದನ್ನು ಖಂಡಿಸಿ ಗುರುವಾರ ಕರ್ನಾಟಕ ವಿಶ್ವವಿದ್ಯಾಲಯ ಸಂಶೋಧನಾ ವಿದ್ಯಾರ್ಥಿಗಳ ಸಂಘದ ವತಿಯಿಂದ ಕವಿವಿ ಎದುರು ಸಂಶೋಧನಾ ಪ್ರಬಂಧಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ಸಂಶೋಧನಾ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ ಖಂಡಿಸಿ, ರಿಸರ್ಚ್ ಫೆಲೋಶಿಪ್ ವಿತರಿಸಬೇಕೆಂದು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಜ್ಯೋತಿ ಐಹೊಳೆ ಅವರು ತಮ್ಮ ಸಂಶೋಧನಾ ಪ್ರಬಂಧಕ್ಕೆ ಬೆಂಕಿ ಹಚ್ಚಿಸಿದರು. ಎಸ್.ಸಿ ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳು ಸಾಮಾನ್ಯರು ಭರಿಸುವಷ್ಟೇ ಶುಲ್ಕ ಭರಿಸಬೇಕೆಂಬ ಆದೇಶ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಅಲ್ಲದೇ, ಸರಸ್ವತಿ ಹಾಸ್ಟೆಲ್ನಲ್ಲಿ ಮಂಗನ ದಾಳಿಯಿಂದ ಬಿದ್ದು ಕಾಲು ಮುರಿದುಕೊಂಡ ವಿದ್ಯಾರ್ಥಿನಿಗೆ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಸ್ಥಿತಿ ಗಂಭೀರವಾಗುತ್ತಿರುವುದನ್ನು ಅರಿತ ಕುಲಸಚಿವ ಮಟ್ಟಿಹಾಳ ಸ್ಥಳಕ್ಕೆ ಆಗಮಿಸಿ, ಎಸ್.ಸಿ ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗಾಗಿ ಪ್ರಯತ್ನಿಸಲಾಗುವುದು. ಸಂಶೋಧನಾ ವಿದ್ಯಾರ್ಥಿಗಳು ಹೋರಾಟವನ್ನು ಕೈಬಿಡಬೇಕೆಂದು ಮನವಿ ಮಾಡಿದರು. ಬೇಡಿಕೆ ಈಡೇರಿಕೆಯಾಗುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಪ್ರತಿಭಟನಾನಿರತರು ಪಟ್ಟು ಹಿಡಿದರು.





















