ಬೆಂಗಳೂರು: ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – 2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಮಹಿಳಾ ಕೃಷಿಕರ ಸಾಧನೆ ಸ್ಫೂರ್ತಿದಾಯಕ: ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ ಕೃಷಿಕರ ಸಬಲೀಕರಣವನ್ನು ಸಾಧಿಸಲು ಸರ್ಕಾರ ಹೆಚ್ಚಿನ ಒತ್ತು ನೀಡುತ್ತದೆ. ಕೃಷಿ ಹಾಗೂ ಉತ್ಪಾದನೋತ್ತರ ಚಟುವಟಿಕೆಗಳಲ್ಲಿ ರೈತರು ತೊಡಗಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕಗೊಳಿಸಬಹುದಾಗಿದೆ. ರೈತರು ಉದ್ಯಮಿಗಳಾಗಬೇಕು. ಉತ್ಪನ್ನಗಳನ್ನು ಬೆಳೆಯುವ ಜೊತೆಗೆ, ಸಂಗ್ರಹಣೆ, ಸಂಸ್ಕರಣೆ, ಪ್ಯಾಕೇಜಿಂಗ್, ಮಾರುಕಟ್ಟೆ, ಉಪಉತ್ಪನ್ನಗಳ ಅಭಿವೃದ್ಧಿಯಲ್ಲಿ ರೈತರು ನಿರತರಾಗಬೇಕಿದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತೊಡಗಿಕೊಳ್ಳುವುದು ಅಗತ್ಯ. ಇಂದಿನ ಪ್ರಶಸ್ತಿಗೆ ಭಾಜನರಾದ ಮಹಿಳಾ ಕೃಷಿಕರ ಸಾಧನೆ ಸ್ಫೂರ್ತಿದಾಯಕವಾಗಿದೆ ಎಂದರು.
ರೈತರ ಸಮಸ್ಯೆಗೆ ಓಗೊಟ್ಟ ಸ್ಪಂದನಾಶೀಲ ಸರ್ಕಾರ: ರೈತರಿಗೆ ಉತ್ತಮವಾದ ಬಿತ್ತನೆ ಬೀಜ, ಗೊಬ್ಬರ, ಔಷಧಿ, ಸರ್ಕಾರ ಒದಗಿಸುತ್ತಿದ್ದು, ಯಂತ್ರೋಪಕರಣಗಳ ಖರೀದಿಗೆ 1,500 ಕೋಟಿ ಸಹಾಯಧನವನ್ನು ನೀಡಲಾಗುತ್ತಿದೆ. ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ. 1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ. ಕಬ್ಬು, ರಾಗಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಸುವುದಕ್ಕೆ ರೈತರು ಸೀಮಿತವಾಗುತ್ತಿದ್ದಾರೆ. ಆದರೆ ಬೆಳೆ ತೆಗೆದ ನಂತರ ಚಟುವಟಿಕೆಗಳಲ್ಲಿ ರೈತರು ಕೈಗೊಳ್ಳಬೇಕು. ಕಬ್ಬು ಬೆಳೆ ರೈತರೊಂದಿಗೆ ಚರ್ಚಿಸಿ ಸಂಧಾನ ನಡೆಸಿ ಕಬ್ಬು ಬೆಳೆಗೆ ಬೆಲೆ ನಿಗದಿಪಡಿಸಲಾಯಿತು. ಅಂತೆಯೇ ತೊಗರಿ ಬೆಳೆಗೆ ಖರೀದಿ ಕೇಂದ್ರವನ್ನು ಒಂದು ತಿಂಗಳ ಮುಂಚೆಯೇ ತೆರೆದು ರೈತರಿಗೆ ಅನುಕೂಲ ಕಲ್ಪಿಸಲಾಯಿತು. ಮೆಕ್ಕೆಜೋಳ ಹೆಚ್ಚುವರಿ ಇಳುವರಿ ಬಂದು 54 ಲಕ್ಷ ಮೆ.ಟನ್ ಉತ್ಪಾದನೆಯಾಗಬಹುದಾಗಿದೆ. ಆದ್ದರಿಂದ ಕೇಂದ್ರ ಕ್ವಿಂಟಾಲ್ವೊಂದಕ್ಕೆ 2400 ರೂ. ನಿಗದಿಪಡಿಸಿದ್ದು, ಮೆಕ್ಕೆಜೋಳ ಬಳಸುವ ಕಾರ್ಖಾನೆಗಳು, ಎಥನಾಲ್ ತಯಾರಕರೊಂದಿಗೆ ಚರ್ಚೆ ನಡೆಸಿ, 40 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಅನುವು ಮಾಡಿಕೊಡಲಾಯಿತು ಎಂದರು.
ಯುವ ಜನರು ಕೃಷಿಯಲ್ಲಿ ತೊಡಗಿಕೊಳ್ಳಬೇಕು: ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು. ಸ್ವಾತಂತ್ರ್ಯಪೂರ್ವದಲ್ಲಿ ಶೇ. 80 ರಷ್ಟು ಜನ ಕೃಷಿಯನ್ನು ಅವಲಂಬಿಸಿದ್ದರು. ಈಗ ಈ ಪ್ರತಿಶತ ಶೇ. 62ಕ್ಕೆ ಇಳಿದಿದೆ. ಕೃಷಿಯಲ್ಲಿ ಉತ್ಪಾದನೋತ್ತರ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ಕೃಷಿ ಲಾಭದಾಯಕವಾಗುತ್ತದೆ ಎಂದರು.
ಕೃಷಿಭಾಗ್ಯ ಯೋಜನೆ ಮರುಸ್ಥಾಪನೆ: ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಬಹಳಷ್ಟು ಈಡೇರಿಸಲಾಗಿದ್ದು, ಅವುಗಳಲ್ಲಿ ಜಾರಿಯಾಗಿರುವ ಕೃಷಿ ಭಾಗ್ಯ ಯೋಜನೆ ಪ್ರಮುಖವಾಗಿದೆ. ಬಿಜೆಪಿ ತನ್ ಅಧಿಕಾರಾವಧಿಯಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ನಮ್ಮ ಸರ್ಕಾರ ಮತ್ತೊಮ್ಮೆ ಕೃಷಿ ಭಾಗ್ಯ ಯೋಜನೆಯನ್ನು ಮರುಸ್ಥಾಪಿಸಿದೆ. ಸುಮಾರು 200 ಕೋಟಿ ಅನುದಾನವನ್ನು ಇದಕ್ಕಾಗಿ ನೀಡಲಾಗಿದೆ. ನಮ್ಮ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗಾಗಿ ಮಾಡಿದ ಶಕ್ತಿ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳು ಅತ್ಯಂತ ಪ್ರಮುಖವೆನಿಸಿವೆ. ಅಲ್ಲದೇ ಅನ್ನಭಾಗ್ಯ ಯೋಜನೆಗಳಿಂದ ಬಡವರು ಉಳಿತಾಯದಲ್ಲಿ ಹೂಡಿಕೆ ಮಾಡಬಹುದಾಗಿದೆ. ಎಲ್ಲರಿಗೂ ಸಮಾನ ಅವಕಾಶವನ್ನು ನೀಡುವ ಉದ್ದೇಶದಿಂದ ಈ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ರಾಜ್ಯಗಳ ಸಮ್ಮತಿಯಿಲ್ಲದ ವಿಬಿಜಿರಾಮ್ ಜಿ ಕಾಯ್ದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರ ಈ ಹಿಂದೆ ಮನರೇಗಾ ಯೋಜನೆಯನ್ನು ಜಾರಿಗೊಳಿಸಿತ್ತು. ಇದರಡಿ ಮಹಿಳೆಯರು, ಅದಿವಾಸಿಗಳು, ಕಾರ್ಮಿಕರಿಗೆ ಉದ್ಯೋಗ ನೀಡುವ ಉತ್ತಮ ಯೋಜನೆಯಾಗಿದ್ದು, ಗ್ರಾಮಸಭೆಗಳಲ್ಲಿ ಕಾಮಗಾರಿಗಳು ನಿರ್ಧಾರವಾಗುತ್ತಿತ್ತು. ಆದರೆ ಈ ಅಧಿಕಾರವು ಈಗ ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಅವರ ನಿರ್ಧರಿಸಿದಂತೆ ಕಾಮಗಾರಿ, ಅನುದಾನ ನೀಡಲಾಗುತ್ತದೆ. ರಾಜ್ಯದ ರೈತರೆಲ್ಲರೂ ಮನರೇಗಾ ಯೋಜನೆಯನ್ನು ಮರುಸ್ಥಾಪಿಸಿ, ವಿಬಿ ಜಿ ರಾಮ್ ಜಿ ಯೋಜನೆಯನ್ನು ತಿರಸ್ಕರಿಸಬೇಕು ಎಂಬ ಮನವಿ ಮಾಡಿದರು. ಮನರೇಗಾ ಅಡಿಯಲ್ಲಿ ಕಾರ್ಮಿಕರ ವೇತನ ಪೂರ್ತಿಯಾಗಿ ಕೇಂದ್ರವೇ ನೀಡುತ್ತಿತ್ತು. ಆದರೆ ಈಗ ಕೇಂದ್ರ ಕೇವಲ 60% ಅನುದಾನ ನೀಡುತ್ತಿದ್ದು, ಶೇ. 40 ರಷ್ಟನ್ನು ರಾಜ್ಯ ಭರಿಸಬೇಕಾಗಿದೆ. ಹಿಂದೆ 100 ದಿನ ಕೆಲಸದ ದಿನಗಳನ್ನು ಖಾತ್ರಿಪಡಿಸುತ್ತಿತ್ತು. ರಾಜ್ಯ ಸರ್ಕಾರಗಳ ಅಂಗೀಕಾರವಿಲ್ಲದೇ, ಮನರೇಗಾ ವನ್ನು ರದ್ದುಪಡಿಸಿ ವಿಬಿಜಿರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದ್ದು, ಅದರಲ್ಲಿನ ಮಹಾತ್ಮಾಗಾಂಧಿ ಹೆಸರನ್ನು ತೆಗೆಯಲಾಗಿದೆ ಎಂದರು.























