ವಿಜಯನಗರ: ಜಿಲ್ಲೆಯ ಐತಿಹಾಸಿಕ ಹಂಪಿ ಉತ್ಸವದ ಎರಡನೇ ದಿನದ ಸಂಭ್ರಮದ ನಡುವೆ ಹಂಪಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡ ಘಟನೆ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶನಿವಾರ ರಾತ್ರಿ ಸುಮಾರು 12.30ರ ಸುಮಾರಿಗೆ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪ ಚಿರತೆ ಕಾಣಿಸಿಕೊಂಡಿದ್ದು ಬೀದಿ ನಾಯಿಯನ್ನು ಬೇಟೆಯಾಡಿದ ಘಟನೆ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ ಹಂಪಿ ಉತ್ಸವದ ಹಿನ್ನೆಲೆ ಸಾವಿರಾರು ಜನರು ಸಂಚರಿಸುತ್ತಿರುವ ಸಂದರ್ಭದಲ್ಲೇ ಶ್ರೀ ವಿರೂಪಾಕ್ಷ ದೇವಸ್ಥಾನದ ಪಕ್ಕದಲ್ಲೇ ಇರುವ ಮನೆಯ ಹತ್ತಿರ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಉಂಟುಮಾಡಿದೆ.
ಇದನ್ನೂ ಓದಿ: ಶಬರಿಮಲೆ ಮಹಿಳೆಯರ ಪ್ರವೇಶ: ಏ. 7ರಿಂದ ಅಂತಿಮ ವಿಚಾರಣೆ
ಸ್ಥಳೀಯರ ಪ್ರಕಾರ ಚಿರತೆ ಕಳೆದ ಕೆಲವು ದಿನಗಳಿಂದ ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಅನುಮಾನ ವ್ಯಕ್ತವಾಗಿದ್ದು ತಕ್ಷಣವೇ ಅರಣ್ಯ ಇಲಾಖೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಿರತೆಯನ್ನು ಶೀಘ್ರದಲ್ಲೇ ಸೆರೆ ಹಿಡಿಯುವಂತೆ ಆಗ್ರಹಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಎಚ್ಚೆತ್ತು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಹಿಡಿಯದಿದ್ದರೆ ಅರಣ್ಯ ಇಲಾಖೆ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.






















