ಊರಗಡೂರಿನಲ್ಲಿ ಕ್ರಿಕೆಟ್ ವಿಚಾರದ ಜಗಳ ದುರಂತದಲ್ಲಿ ಅಂತ್ಯ
ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ನಡುವೆ ಉಂಟಾದ ಜಗಳ ದುರಂತ ಅಂತ್ಯ ಕಂಡಿದ್ದು, 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಹೊರವಲಯದ ಊರಗಡೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಊರಗಡೂರು ನಿವಾಸಿ ಕುಮಾರ್ ಅವರ ಪುತ್ರ ಸಂಕೇತ್ (15) ಮೃತಪಟ್ಟ ವಿದ್ಯಾರ್ಥಿ. ಸ್ಥಳೀಯ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕಳೆದ ಎರಡು ತಿಂಗಳಿಂದ ರಾತ್ರಿ 8.30ರವರೆಗೆ ವಿಶೇಷ ತರಗತಿಗಳು ನಡೆಯುತ್ತಿವೆ. ಸೋಮವಾರವೂ ವಿಶೇಷ ತರಗತಿ ಮುಗಿಸಿ ಹೊರಬಂದ ವೇಳೆ ಕ್ರಿಕೆಟ್ ಆಟದ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.
ಇದನ್ನೂ ಓದಿ: ಧಾರವಾಡದಲ್ಲಿ ಉಗ್ರಗೊಂಡ ಉದ್ಯೋಗಾಕಾಂಕ್ಷಿಗಳ ಹೋರಾಟ: ಸಚಿವರ ಭಾವಚಿತ್ರಗಳಿಗೆ ಚಪ್ಪಲಿ ಸೇವೆ
ಜಗಳವನ್ನು ಬಿಡಿಸಲು ಮುಂದಾದ ಸಂಕೇತ್ಗೆ ಆಯಕಟ್ಟಿನ ಜಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇಬ್ಬರು ಅಪ್ರಾಪ್ತರು ವಶಕ್ಕೆ: ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಊರಗಡೂರಿನಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.






















