ಶಿವಮೊಗ್ಗ: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ಪಿತ್ತ ನೆತ್ತಿಗೇರಿ ರಾಜ್ಯದ ಅಭಿವೃದ್ಧಿಯನ್ನೇ ಮರೆತುಬಿಟ್ಟಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ. ಶಿವಕುಮಾರ್ ಸೇರಿದಂತೆ ಡಾ.ಜಿ. ಪರಮೇಶ್ವರ್, ಡಾ. ಹೆಚ್.ಸಿ. ಮಹದೇವಪ್ಪ ಮತ್ತಿತರರು ರೇಸ್ನಲ್ಲಿದ್ದಾರೆ. ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಒಳಜಗಳ ನಡೆಯುತ್ತಲೇ ಇದೆ. ಅವರವರ ಬೆಂಬಲಿಗರು ಹಾರಾಡುತ್ತಲೇ ಇದ್ದಾರೆ. ಇಷ್ಟೆಲ್ಲಾ ರಾಮಾಯಣಗಳು ಇದ್ದರೂ ಕೂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್ ನಿಯಂತ್ರಿಸದೇ ಸತ್ತು ಹೋಗಿದೆ ಎಂದರು.
ಇದನ್ನೂ ಓದಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಇದಲ್ಲದೇ ಮಂತ್ರಿ ಸ್ಥಾನಕ್ಕಾಗಿಯೂ ಕಚ್ಚಾಟ ನಡೆಯುತ್ತಿದೆ. ಅಹಿಂದ ವತಿಯಿಂದ ಮುತ್ತಳ್ಳಿ ಶಿವಣ್ಣ 25 ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಹರಿಪ್ರಸಾದ್ ಅವರನ್ನು ಗೃಹಮಂತ್ರಿ ಮಾಡಬೇಕು ಎಂದು ಹೈಕಮಾಂಡ್ಗೇ ಎಚ್ಚರಿಕೆ ಕೊಟ್ಟಿದ್ದಾರೆ. ವಿಧಾನ ಪರಿಷತ್ ಸದಸ್ಯರೂ ರಗಳೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಹೊಸ ಶಾಸಕರೂ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಒಟ್ಟಾರೆ, ಇಡೀ ಕಾಂಗ್ರೆಸ್ ಪಕ್ಷದಲ್ಲಿ ರಗಳೆ ನಡೆಯುತ್ತಿದೆ ಎಂದರು.























