Home Advertisement
Home ಸುದ್ದಿ ರಾಜ್ಯ ನಾವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ; ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ ಭರವಸೆ

ನಾವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ; ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ ಭರವಸೆ

0
106

ನವದೆಹಲಿ: ನಾಡು, ನುಡಿ, ಜಲ ವಿಚಾರವಾಗಿ ರಾಜ್ಯದ ಹಿತ ದೃಷ್ಟಿಯಿಂದ ಪಕ್ಷಭೇದ ಮರೆತು ಒಂದಾಗಿರುತ್ತೇವೆ. ಸಮಸ್ಯೆಗಳ ನಿವಾರಣೆಗೆ ನಾವು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ ದಿನಗಳಿಂದ ನನೆಗುದಿಗೆ ಬಿದ್ದ ಎತ್ತಿನಹೊಳೆ ಯೋಜನೆ ಕುರಿತು ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ. ಇವತ್ತು ಸಂಸದರ ಸಭೆ ಕರೆದಿದ್ದರು. ಆದರೆ, ಕರ್ನಾಟಕದಲ್ಲೂ ಉಪಚುನಾವಣೆ ಘೋಷಣೆಯಾಗಿದೆ. ಅದೇ ಕ್ಷೇತ್ರಗಳಲ್ಲಿ ಈ ಯೋಜನೆಗಳು ಬರಲಿವೆ. ಎಷ್ಟರಮಟ್ಟಿಗೆ ಮಾತಾಡಬೇಕು ಎನ್ನುವುದು ತಾಂತ್ರಿಕ ಸಮಸ್ಯೆ ಎಂದರು.

ಆದರೆ ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕು ಅದನ್ನು ಮಾಡುತ್ತೇವೆ. ನಾನು ಸಂಸತ್‌ನಲ್ಲಿ ಎಲ್ಲಾ ಯೋಜನೆಗಳ ಬಗ್ಗೆ ಮಾತಾಡಿದ್ದೇನೆ. ಈಗ ರಾಜ್ಯ ಸರ್ಕಾರ ಯೋಜನೆಗಳ ಸದ್ಯದ ಸ್ಥಿತಿಯ ಬಗ್ಗೆ ವಿವರಣೆ ನೀಡಿದ ನಂತರ ಅವುಗಳ ನಿವಾರಣೆಗೆ ನಾವು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಭ್ಯರ್ಥಿಗಳ ಕುರಿತು ಈಗಾಗಲೇ ಕೋರ್ ಕಮಿಟಿಯಲ್ಲಿ ಚರ್ಚೆಯಾಗಿದೆ. ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ ಎಂದು ಹೇಳಿದರು.