Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ಬಿಜೆಪಿಯವರ ಅಪಪ್ರಚಾರಕ್ಕೆ ಜನರು ಮಣೆ ಹಾಕುವುದಿಲ್ಲ

ಬಿಜೆಪಿಯವರ ಅಪಪ್ರಚಾರಕ್ಕೆ ಜನರು ಮಣೆ ಹಾಕುವುದಿಲ್ಲ

0
19

ಬಾಗಲಕೋಟೆ: ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷವನ್ನು ಜನರು ಗೆಲ್ಲಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿಯವರು ನಾಮಪತ್ರ ಸಲ್ಲಿಸಿದ್ದಾರೆ. ಎಚ್.ವೈ. ಮೇಟಿಯವರು ಈ ಭಾಗದ ಜನಪ್ರಿಯ ನಾಯಕರಾಗಿದ್ದು, ಅನಿರೀಕ್ಷಿತವಾಗಿ ನಮ್ಮನ್ನು ಅಗಲಿದ್ದಾರೆ. ಆದ್ದರಿಂದ ಆ ಶಾಸಕ ಸ್ಥಾನವನ್ನು ತುಂಬಲು ಸರ್ವಸಮ್ಮತಿ ಪಡೆದು, ಅವರ ಕುಟುಂಬದವರನ್ನೇ ಆಯ್ಕೆ ಮಾಡಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳು ಜನರಲ್ಲಿ ಸಂತಸ ತಂದಿದೆ: ನಮ್ಮದು ನುಡಿದಂತೆ ನಡೆಯುವ ಸರ್ಕಾರವಾಗಿದ್ದು, 2013 ರಿಂದ 2018 ವರೆಗೆ ಮತ್ತು 2023 ರಿಂದ ಜನಪರ ಯೋಜನೆಗಳನ್ನು ರಾಜ್ಯಕ್ಕೆ ನೀಡಲಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿನ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದು, ಇದಕ್ಕಾಗಿ 1.21 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ಗ್ಯಾರಂಟಿಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದ್ದರು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯ ಜನ ಸಂತೋಷದಿಂದಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಹಿಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಬಹುಮತದಿಂದ ಗೆಲುವು ಸಾಧಿಸಿದೆ ಎಂದರು.

ಕೃಷ್ಣಾ ಮೇಲ್ದಂಡೆ ಹಂತ-3 ಜಮೀನು ಪರಿಹಾರಕ್ಕೆ ಅನುದಾನ: ಬಿಜೆಪಿಯವರು ಕೇವಲ ಹಿಂದುತ್ವವಾದವನ್ನು ಮುಂದಿಡುತ್ತಾರೆಯೇ ಹೊರತು, ಕೃಷ್ಣಾ ಮೇಲ್ದಂಡೆ ಹಂತ-3 ಯೋಜನೆಗೆ ಅವರ ಅಧಿಕಾರಾವಧಿಯಲ್ಲಿ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ನಮ್ಮ ಸರ್ಕಾರ ಈ ಯೋಜನೆಯಡಿ ಮುಳುಗಡೆಯಾಗುವ ಜಮೀನಿಗೆ ಸೂಕ್ತ ಪರಿಹಾರ ನೀಡುವ ನಿರ್ಣಯ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಬೇಕಾದ ಅನುದಾನವನ್ನು ಈ ವರ್ಷದ ಬಜೆಟ್‌ನಲ್ಲಿ ತೆಗೆದಿರಿಸಲಾಗಿದೆ. ಇದಕ್ಕಾಗಿ 70 ಸಾವಿರ ಕೋಟಿ ರೂ.ಗಳ ಪರಿಹಾರವನ್ನು ಒಂದೇ ಹಂತದಲ್ಲಿ ನೀಡಿ, ನನೆಗುದಿಗೆ ಬಿದ್ದಿರುವ ಈ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.

ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ: ಬಾಗಲಕೋಟೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಎಚ್.ವೈ. ಮೇಟಿಯವರ ಕನಸಾಗಿತ್ತು. ಹಳ್ಳಿಗಾಡಿನ ವಿದ್ಯಾರ್ಥಿಗಳು ವೈದ್ಯ ವೃತ್ತಿಯನ್ನು ಮಾಡಬೇಕೆಂದು ಈ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸುವ ಆಶಯ ಸರ್ಕಾರಕ್ಕಿದೆ. ಮೇಟಿಯವರು ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿಯವರನ್ನು ಜನರು ಬೆಂಬಲಿಸುವ ವಿಶ್ವಾಸವಿದೆ. ಬಿಜೆಪಿಯವರ ಅಪಪ್ರಚಾರಕ್ಕೆ ಜನರು ಮಣೆ ಹಾಕುವುದಿಲ್ಲ ಎಂದು ಸಾಬೀತಾಗಿದೆ. ಬಿಜೆಪಿಯವರ ಮನೆದೇವರು ಸುಳ್ಳು. ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.