ಕಲಬುರಗಿ: ರಾಜ್ಯದಲ್ಲಿ ಬಾಕಿ ಉಳಿದಿರುವ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಶುಕ್ರವಾರ ಕಲಬುರಗಿ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಆಕ್ಸಾ (ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್) ಸಂಘಟನೆಯ ನೇತೃತ್ವದಲ್ಲಿ ನಡೆದ ಈ ಹೋರಾಟ ಸರ್ಕಾರದ ವಿಳಂಬ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.
ಪೊಲೀಸ್ ಇಲಾಖೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು. ಆದರೆ, ಆಕ್ಸಾ ಅಧ್ಯಕ್ಷ ಕಾಂತಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿ ವಿಶೇಷ ಅನುಮತಿ ಪಡೆಯುವ ಮೂಲಕ ಈ ಬೃಹತ್ ಮೆರವಣಿಗೆಯನ್ನು ಯಶಸ್ವಿಯಾಗಿ ಸಂಘಟಿಸಿದರು.
ಕೂಡಲೇ ಪ್ರಕ್ರಿಯೆ ಆರಂಭಿಸದಿದ್ದರೆ ಮುಂಬರುವ ಉಪಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸುವುದಾಗಿ ಉದ್ಯೋಗಾಕಾಂಕ್ಷಿಗಳು ಎಚ್ಚರಿಕೆ ನೀಡಿದರು.
ಬಾಕಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಪಾರದರ್ಶಕವಾದ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಾದ್ಯಂತ ಮತ್ತು ಡಿಸಿ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆಗೆ ನಗರ ಬಿಜೆಪಿ ಘಟಕ, ವಿವಿಧ ಸಂಘಟನೆಗಳು, ವಿವಿಧ ಮಠಾಧೀಶರು ಬೆಂಬಲಿಸಿ ಭಾಗಿಯಾದರು.























