Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಭಾಷಣ ಮಧ್ಯೆ ಕುಸಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆಗೆ ದಾಖಲು

ಭಾಷಣ ಮಧ್ಯೆ ಕುಸಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆಗೆ ದಾಖಲು

0
164

ಬೆಂಗಳೂರು : ಕರ್ನಾಟಕದ ಮಾಜಿ ಲೋಕಾಯುಕ್ತ ಮತ್ತು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಕೆಲಕಾಲ ಆತಂಕ ಮೂಡಿಸಿತು.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಡಾ. ಪಿಜಿಆರ್ ಸಿಂಧ್ಯ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರು, ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಾಗಲೇ ಸಮತೋಲನ ತಪ್ಪಿ ನೆಲಕ್ಕುಸಿದರು. ತಕ್ಷಣ ಸ್ಥಳದಲ್ಲಿದ್ದವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯಕೀಯ ಮಾಹಿತಿ: ವೈದ್ಯರು ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಗಣನೀಯವಾಗಿ ಕುಸಿದಿರುವುದು (Low Sugar) ಪತ್ತೆಯಾಗಿದೆ. ಜೊತೆಗೆ, ಲಘು ಹೃದಯಾಘಾತದ ಅನುಮಾನವೂ ವ್ಯಕ್ತವಾಗಿದ್ದು, ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ತಜ್ಞ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.

80 ವರ್ಷ ದಾಟಿದರೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರುವ ಹೆಗ್ಡೆ ಅವರ ಆರೋಗ್ಯ ವಿಚಾರ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಗಣ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಅವರ ಶೀಘ್ರ ಗುಣಮುಖತೆಗೆ ಹಲವರು ಪ್ರಾರ್ಥಿಸುತ್ತಿದ್ದಾರೆ.