ಬೆಂಗಳೂರು: ಬೆಂಗಳೂರು ಕೇವಲ ತಂತ್ರಜ್ಞಾನದ ಹಬ್ ಮಾತ್ರವಲ್ಲ, ವಿಶ್ವಕ್ಕೆ ಅಧ್ಯಾತ್ಮವನ್ನು ಪಸರಿಸುವ ಕೇಂದ್ರವೂ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿಶಂಕರ್ ಗುರೂಜಿ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಿರ್ಮಿಸಲಾದ ಧ್ಯಾನ ಮಂದಿರವನ್ನು ಉದ್ಘಾಟಿಸಿದರು.
ಈ ವೇಳೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದ ಪ್ರಧಾನಿ, “45 ವರ್ಷಗಳ ಹಿಂದೆ ಗುರೂಜಿ ಬಿತ್ತಿದ ಬೀಜ ಇಂದು ಹೆಮ್ಮರವಾಗಿ ಬೆಳೆದಿದೆ. ಇಡೀ ಜಗತ್ತಿನಾದ್ಯಂತ ಲಕ್ಷಾಂತರ ಜನರ ಬದುಕನ್ನು ನೆಮ್ಮದಿಯಾಗಿಸುತ್ತಿದೆ” ಎಂದರು.
“ಭಾರತದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಯೋಗ ಮತ್ತು ಪ್ರಾಣಾಯಾಮಗಳನ್ನು ಈ ಸಂಸ್ಥೆ ಜಾಗತಿಕವಾಗಿ ಜನಪ್ರಿಯಗೊಳಿಸುತ್ತಿದೆ. ಭಾರತ ವಿಶ್ವಗುರುವಾಗಲು ಇಂತಹ ಸಂಸ್ಥೆಗಳ ಪಾತ್ರ ಅನನ್ಯವಾದುದು” ಎಂದರು.





















