Home Advertisement
Home ಸುದ್ದಿ ದೇಶ ಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕರ್ನಾಟಕ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

0
165

10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ: ಕರ್ನಾಟಕದಲ್ಲಿ 4 ಸ್ಥಾನ ಖಾಲಿ

ನವದೆಹಲಿ: ಭಾರತಿಯ ಚುನಾವಣಾ ಆಯೋಗವು (ECI) ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಜೂನ್ ಹಾಗೂ ಜುಲೈ 2026ರಲ್ಲಿ ಅವಧಿ ಮುಗಿಯಲಿರುವ ಸದಸ್ಯರ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದ್ದು, ಜೂನ್ 18, 2026ರಂದು ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಘೋಷಣೆಯೊಂದಿಗೆ ಹಲವು ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಹಾಗೂ ಬೆಂಬಲದ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ತೊಡಗಿಕೊಂಡಿವೆ.

ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಜೂನ್ 8ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಹೊಂದಿದ್ದಾರೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಸ್ಪರ್ಧೆಯಿಂದ ಹಿಂದೆ ಸರಿಯುವವರಿಗೆ ಜೂನ್ 11 ಕೊನೆಯ ದಿನಾಂಕವಾಗಿ ನಿಗದಿಯಾಗಿದೆ.

ಜೂನ್ 18ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ನಂತರ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಜೂನ್ 20ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿ ಆಯೋಗ ಹೊಂದಿದೆ.

ಈ ಚುನಾವಣೆಯಲ್ಲಿ ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ರಾಜಸ್ಥಾನ, ಅರುಣಾಚಲ ಪ್ರದೇಶ, ಕರ್ನಾಟಕ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಸಭಾ ಸ್ಥಾನಗಳು ಸೇರಿವೆ. ಇವುಗಳಲ್ಲಿ ಆಂಧ್ರಪ್ರದೇಶ ಮತ್ತು ಗುಜರಾತ್‌ನಲ್ಲಿ ತಲಾ ನಾಲ್ಕು ಸ್ಥಾನಗಳು ಖಾಲಿಯಾಗುತ್ತಿವೆ. ಕರ್ನಾಟಕದಲ್ಲಿಯೂ ನಾಲ್ಕು ಸದಸ್ಯರ ಅವಧಿ ಪೂರ್ಣಗೊಳ್ಳುತ್ತಿರುವುದರಿಂದ, ರಾಜ್ಯ ರಾಜಕೀಯದಲ್ಲಿ ಚುನಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿವೆ.

ಪ್ರಮುಖ ರಾಜಕೀಯ ನಾಯಕರ ಅವಧಿಯೂ ಇದೇ ಅವಧಿಯಲ್ಲಿ ಅಂತ್ಯಗೊಳ್ಳುತ್ತಿದೆ. ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ರಾಜ್ಯಸಭಾ ಅವಧಿ ಮುಗಿಯುತ್ತಿದೆ. ಇದೇ ವೇಳೆ ಕೇಂದ್ರ ಸಚಿವರಾದ ಜಾರ್ಜ್ ಕುರಿಯನ್ ಮತ್ತು ರವನೀತ್ ಸಿಂಗ್ ಅವರ ಅವಧಿಯೂ ಪೂರ್ಣಗೊಳ್ಳುತ್ತಿದೆ. ರಾಜಸ್ಥಾನದಲ್ಲಿ ರಾಜೇಂದ್ರ ಗೆಹ್ಲೋಟ್, ನೀರಜ್ ಡಾಂಗಿ ಮತ್ತು ರವನೀತ್ ಸಿಂಗ್ ಅವರ ಸ್ಥಾನಗಳೂ ಖಾಲಿಯಾಗುತ್ತಿದ್ದು, ಹೊಸ ಅಭ್ಯರ್ಥಿಗಳ ಆಯ್ಕೆಗೆ ರಾಜಕೀಯ ಪಕ್ಷಗಳು ಚಟುವಟಿಕೆಯಲ್ಲಿ ತೊಡಗಿವೆ.

ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ನ್ಯಾಯಯುತವಾಗಿಡಲು ಆಯೋಗವು ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮತದಾನ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ವೀಕ್ಷಕರನ್ನೂ ನಿಯೋಜಿಸಲಾಗುತ್ತದೆ.

ರಾಜ್ಯಸಭೆಯಲ್ಲಿನ ಸಂಖ್ಯಾಬಲವು ಕೇಂದ್ರ ಸರ್ಕಾರದ ಪ್ರಮುಖ ಮಸೂದೆಗಳು, ಕಾನೂನು ತಿದ್ದುಪಡಿಗಳು ಹಾಗೂ ರಾಜಕೀಯ ತಂತ್ರಗಳ ಮೇಲೆ ನೇರ ಪರಿಣಾಮ ಬೀರುವುದರಿಂದ ಈ ಚುನಾವಣೆ ರಾಷ್ಟ್ರ ರಾಜಕೀಯದಲ್ಲಿ ಮಹತ್ವ ಪಡೆದಿದೆ. ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಗುತ್ತವೆ ಎಂಬುದರ ಮೇಲೆ ಭವಿಷ್ಯದ ರಾಜಕೀಯ ಸಮೀಕರಣಗಳು ಅವಲಂಬಿತವಾಗಿರುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ, ಮೈತ್ರಿ ರಾಜಕೀಯ ಹಾಗೂ ಬೆಂಬಲದ ಲೆಕ್ಕಾಚಾರ ಇನ್ನಷ್ಟು ವೇಗ ಪಡೆಯುವ ಸಾಧ್ಯತೆ ಇದೆ.