ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ಮುರಿನಕಟ್ಟೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಹಿಂದೂಗಳ
ಪವಿತ್ರ ಧಾರ್ಮಿಕ ಕಟ್ಟೆಯನ್ನು ಧ್ವಂಸ ಮಾಡಿದ ಕುರಿತು ಸುಮಾರು 100 ಜನರ ಮೇಲೆ ಪ್ರಕರಣ ದಾಖಲಾಗಿದೆ.
ಸ್ಥಳ ವಿವಾದಕ್ಕೆ ಸಂಬಂಧಪಟ್ಟಂತೆ ಸೂಸಗಡಿ ಹೋಬಳಿಯ ಕಂದಾಯ ನಿರೀಕ್ಷಕ ವಿಶ್ವನಾಥ ಗಾಂವಕರ್ ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ವೆಂಕಟಾಪುರ ಗ್ರಾಮದ ಮುರಿನಕಟ್ಟೆ ಸ್ಥಳವು ಅನಾದಿಕಾಲದಿಂದ ಧಾರ್ಮಿಕ ಆಚರಣೆಗಳು ನಡೆಯುತ್ತಿರುವ ಸಾಂಪ್ರದಾಯಿಕ ಸ್ಥಳವಾಗಿತ್ತು. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿದ್ದ ಚೌಕಾಕಾರದ ಕಟ್ಟೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.
ಮೇ 24ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸ್ಥಳದಲ್ಲಿ ಚೌಕಾಕಾರದ ಕಟ್ಟೆ ನಿರ್ಮಿಸಿತ್ತು. ಆದರೆ ಅದೇ ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಸುಮಾರು 100ಕ್ಕೂ ಹೆಚ್ಚು ಜನರು ಗುಂಪುಗೂಡಿ ಬಂದು ಕಟ್ಟೆಯನ್ನು ಒಡೆದು ನೆಲಸಮಗೊಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.





















