ದಾವಣಗೆರೆ: ‘ನೀವು ಮಾತ್ರವಲ್ಲ, ನಿಮ್ಮ ಸ್ನೇಹಿತರು, ಸಂಬಂಧಿಕರು ಮತ್ತು ಇಡೀ ಸಮಾಜವೇ ಮಾದಕ ದ್ರವ್ಯಗಳಿಗೆ ‘ಇಲ್ಲ’ ಎಂದು ಒಕ್ಕೊರಲಿನಿಂದ ಹೇಳಬೇಕು ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಯುವಜನತೆಗೆ ಕರೆ ನೀಡಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯಲ್ಲಿರುವ ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿಗೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ದ್ರವ್ಯಗಳ (ಡ್ರಗ್) ಪಿಡುಗಿನಿಂದ ದೂರವಿರುವಂತೆ ಕರೆ ನೀಡಿದ ಅವರು, ‘ನಿಮ್ಮ ಮೆದುಳು ನಿಮ್ಮ ಸ್ವಂತ ಆಲೋಚನೆಗಳಿಂದ ನಿಯಂತ್ರಿಸಲ್ಪಡಬೇಕೇ ಹೊರತು ಯಾವುದೇ ಮಾದಕ ವಸ್ತುವಿನಿಂದಲ್ಲ,’ ಎಂದು ಗಂಭೀರ ಎಚ್ಚರಿಕೆ ನೀಡಿದರು.
‘2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ (ವಿಕಸಿತ ಭಾರತ) ರೂಪಿಸುವ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ಸಾಕಾರಗೊಳಿಸುವಲ್ಲಿ ತಂತ್ರಜ್ಞಾನ ಮತ್ತು ಯುವ ಇಂಜಿನಿಯರ್ಗಳ ಪಾತ್ರ ಅತ್ಯಂತ ಹಿರಿದಾಗಿದೆ’ ಎಂದು ಪ್ರತಿಪಾದಿಸಿದರು.
ಪ್ರಸ್ತುತ ಭಾರತವು ಕೃತಕ ಬುದ್ಧಿಮತ್ತೆ (ಎಐ), ಸೆಮಿಕಂಡಕ್ಟರ್ ತಂತ್ರಜ್ಞಾನ, ಹಸಿರು ಇಂಧನ, ಡಿಜಿಟಲ್ ಮೂಲಸೌಕರ್ಯ, ಏರೋಸ್ಪೇಸ್ ಮತ್ತು ಬಯೋಟೆಕ್ನಾಲಜಿ ಕ್ಷೇತ್ರಗಳಲ್ಲಿ ಅಭೂತಪೂರ್ವ ಬದಲಾವಣೆಯನ್ನು ಕಾಣುತ್ತಿದೆ ಎಂದು ತಿಳಿಸಿದರು.




















