‘ಇನ್ನೆರಡು ದಿನ ಕಾಯಿರಿ’ ಎಂದ ಅಣ್ಣಾಮಲೈ, ರಾಜಕೀಯದಲ್ಲಿ ಹೆಚ್ಚಿದ ಕುತೂಹಲ – ಹೊಸ ಪಕ್ಷ ಸ್ಥಾಪನೆ ಊಹಾಪೋಹಗಳ ನಡುವೆ ಅಮಿತ್ ಶಾ ಭೇಟಿ
ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ನಡೆಯುತ್ತಿರುವ ಊಹಾಪೋಹಗಳು ಮತ್ತಷ್ಟು ತೀವ್ರಗೊಂಡಿವೆ. ಬಿಜೆಪಿ ತೊರೆದು ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಅವರು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ, ಮಂಗಳವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅಣ್ಣಾಮಲೈ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಭೇಟಿಗೆ ಮುನ್ನ ಅಣ್ಣಾಮಲೈ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದರು. ಈ ಸಭೆಗಳು ಅವರ ಮುಂದಿನ ರಾಜಕೀಯ ಹೆಜ್ಜೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.
ಪಕ್ಷದ ಮೂಲಗಳ ಪ್ರಕಾರ, ಅಣ್ಣಾಮಲೈ ಅವರು ತಮ್ಮದೇ ಆದ ರಾಜಕೀಯ ಮಾರ್ಗವನ್ನು ರೂಪಿಸಿಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದ್ದು, ಸೌಹಾರ್ದಯುತವಾಗಿ ಬಿಜೆಪಿಯಿಂದ ದೂರ ಸರಿಯುವ ಇಚ್ಛೆಯನ್ನು ನಾಯಕರ ಮುಂದೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಅಧಿಕೃತವಾಗಿ ರಾಜೀನಾಮೆ ನೀಡಿರುವ ಬಗ್ಗೆ ಯಾವುದೇ ದೃಢೀಕರಣ ಲಭ್ಯವಾಗದಿದ್ದರೂ, ಅವರು ತಮ್ಮ ನಿರ್ಧಾರವನ್ನು ಪಕ್ಷದ ನಾಯಕರಿಗೆ ತಿಳಿಸಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳುತ್ತಿವೆ.
ಬಿಜೆಪಿಯ ಹಿರಿಯ ನಾಯಕರೊಬ್ಬರ ಪ್ರಕಾರ, “ಅಣ್ಣಾಮಲೈ ನಿಜವಾಗಿಯೂ ರಾಜೀನಾಮೆ ಸಲ್ಲಿಸಿದ್ದರೆ, ಅಮಿತ್ ಶಾ ಅವರೊಂದಿಗಿನ ಭೇಟಿಯ ನಂತರ ಚಿತ್ರಣ ಸ್ಪಷ್ಟವಾಗಲಿದೆ. ಪಕ್ಷದಲ್ಲಿ ಉಳಿಯುವಂತೆ ಮನವೊಲಿಸುವ ಪ್ರಯತ್ನಗಳು ಯಶಸ್ವಿಯಾದರೆ ಪರಿಸ್ಥಿತಿ ಬದಲಾಗಬಹುದು. ಇಲ್ಲದಿದ್ದರೆ ಅವರು ಹೊಸ ರಾಜಕೀಯ ದಾರಿಯನ್ನು ಆರಿಸುವ ಸಾಧ್ಯತೆ ಇದೆ” ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪಕ್ಷ ಸ್ಥಾಪನೆ ಕುರಿತ ವದಂತಿಗಳು ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಅಣ್ಣಾಮಲೈ, “ದಯವಿಟ್ಟು ಸ್ವಲ್ಪ ಕಾಯಿರಿ. ಇನ್ನೆರಡು ದಿನಗಳಲ್ಲಿ ಎಲ್ಲ ವಿಚಾರಗಳ ಬಗ್ಗೆ ಮಾತನಾಡುತ್ತೇನೆ” ಎಂದು ಹೇಳಿದ್ದರು. ಈ ಹೇಳಿಕೆಯು ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.
ಇನ್ನೊಂದೆಡೆ, ಬಿಜೆಪಿ ಸೈದ್ಧಾಂತಿಕ ಮಾರ್ಗದರ್ಶಕ ಎಂದು ಪರಿಗಣಿಸಲ್ಪಡುವ ಆರ್ಎಸ್ಎಸ್ ಕೂಡ ಅಣ್ಣಾಮಲೈ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಆಸಕ್ತಿ ತೋರಿದೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡಿನಲ್ಲಿ ಬಿಜೆಪಿ ಸಂಘಟನೆಯನ್ನು ಬಲಪಡಿಸುವಲ್ಲಿ ಅಣ್ಣಾಮಲೈ ಪ್ರಮುಖ ಪಾತ್ರ ವಹಿಸಿರುವುದರಿಂದ, ಅವರ ಮುಂದುವರಿಕೆಯನ್ನು ಸಂಘ ಮತ್ತು ಬಿಜೆಪಿ ನಾಯಕತ್ವ ಎರಡೂ ಬಯಸುತ್ತಿವೆ ಎನ್ನಲಾಗಿದೆ.
ಬಿಜೆಪಿ ನಾಯಕತ್ವವು ರಾಷ್ಟ್ರೀಯ ಮಟ್ಟದ ಜವಾಬ್ದಾರಿಗಳು, ಪಕ್ಷದ ಪ್ರಮುಖ ಹುದ್ದೆಗಳು ಹಾಗೂ ರಾಜ್ಯಸಭೆ ಸದಸ್ಯತ್ವ ಸೇರಿದಂತೆ ಹಲವು ಆಯ್ಕೆಗಳನ್ನು ಅಣ್ಣಾಮಲೈ ಅವರ ಮುಂದೆ ಇಟ್ಟಿದೆ ಎಂಬ ವರದಿಗಳಿವೆ. ಆದರೆ ಅವರು ಈ ಎಲ್ಲ ಪ್ರಸ್ತಾವನೆಗಳನ್ನು ನಿರಾಕರಿಸಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳುತ್ತಿವೆ.
ಅಣ್ಣಾಮಲೈ ಬಿಜೆಪಿಯೊಳಗೆ ತಮ್ಮ ರಾಜಕೀಯ ಬೆಳವಣಿಗೆಗೆ ಮಿತಿಯಿದೆ ಎಂದು ಭಾವಿಸಿದ್ದು, ಸ್ವತಂತ್ರ ರಾಜಕೀಯ ವೇದಿಕೆಯನ್ನು ನಿರ್ಮಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಮಿಳುನಾಡಿನ ಇತರ ರಾಜಕೀಯ ಪಕ್ಷಗಳಾದ ತಮಿಳಗ ವೆಟ್ರಿ ಕಳಗಂ ಅಥವಾ ಬೇರೆ ಯಾವುದೇ ಪಕ್ಷ ಸೇರುವ ಉದ್ದೇಶ ಅವರಿಗಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆಗಳು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಕೆಲವೇ ವಾರಗಳ ಬಳಿಕ ನಡೆದಿವೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಪಕ್ಷದ ಭವಿಷ್ಯದ ನಾಯಕತ್ವ ಮತ್ತು ರಾಜಕೀಯ ತಂತ್ರದ ಬಗ್ಗೆ ಬಿಜೆಪಿ ಒಳಗೇ ಚರ್ಚೆಗಳು ಜೋರಾಗಿವೆ.
ಅಮಿತ್ ಶಾ ಹಾಗೂ ಬಿಜೆಪಿ ನಾಯಕತ್ವದೊಂದಿಗೆ ನಡೆದ ಮಾತುಕತೆಗಳ ಬಳಿಕ ಅಣ್ಣಾಮಲೈ ಅವರ ಮುಂದಿನ ನಿರ್ಧಾರ ಏನಾಗಲಿದೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ಕೆಲ ದಿನಗಳಲ್ಲಿ ಅವರಿಂದ ಅಧಿಕೃತ ಘೋಷಣೆ ಹೊರಬರುವ ಸಾಧ್ಯತೆ ಇದೆ.




















