ಧಾರವಾಡ: ನಾಡಿನ ಅಭಿವೃದ್ಧಿಪರ ಹಾಗೂ ಸಮಾಜಮುಖಿ ಚಿಂತಕರು, ಸರಳ ಸಜ್ಜನಿಕೆಯ ವ್ಯಕ್ತಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ ಹಾಗು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ ಅವರು, ಮಾಜಿ ಶಾಸಕರು ಹಾಗೂ ನನ್ನ ಆತ್ಮೀಯರಾಗಿದ್ದ ಶ್ರೀ ಶಿವಾನಂದ ಅಂಬಡಗಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಎಂದು ತಿಳಿದು ಅತ್ಯಂತ ದುಃಖವಾಯಿತು. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ತಿಳಿಸಿದ್ದಾರೆ.