ಬೆಳಗಾವಿ: ನಾಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮೂರು ದಿನ ಬೆಳಗಾಂ ಶುಗರ್ಸ್ನಿಂದ ಮೋಡ ಬಿತ್ತನೆ ಮಾಡಲಾಗುತ್ತಿದ್ದು, ರಾಜ್ಯ, ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ಬಳಸುವ ವಿಮಾನಗಳು ಸಾಂಬ್ರಾ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. ಇನ್ನು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡ ಬಿತ್ತನೆ ಮಾಡಲಾಗುವುದು. ಈ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಮೋಡ ಬಿತ್ತನೆ ಕಾರ್ಯ ಬೆಳಗಾವಿ ಜಿಲ್ಲೆಗೆ ಮಾತ್ರವೇ ಸೀಮಿತವಾಗಿದ್ದು, ಈ ಕಾರ್ಯಕ್ಕಾಗಿ ಮೂರು ದಿನಕ್ಕಾಗುವ ಖರ್ಚು ವೆಚ್ಚವನ್ನು ಬೆಳಗಾಂ ಶುಗರ್ಸ್ನಿಂದ ಭರಿಸಲಾಗುವುದು ಎಂದು ಅವರು ತಿಳಿಸಿದರು.