SK Home Ad
Home ನಮ್ಮ ಜಿಲ್ಲೆ ಕೊನೆಗೂ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ

ಕೊನೆಗೂ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ

0
121

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ರಾಜಕೀಯ ಒತ್ತಡ ತೀವ್ರಗೊಂಡಿರುವ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಕೊನೆಗೂ ತಮ್ಮ ಸಚಿವ ಸ್ಥಾನ ಅಷ್ಟೇ ಅಲ್ಲದೇ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದನದ ಒಳಗೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿತ್ತು. ಇದೀಗ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಡೆಸಿದ ಹೋರಾಟಕ್ಕೆ ರಾಜಕೀಯವಾಗಿ ಜಯ ಸಿಕ್ಕಂತಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ದೆಹಲಿಯಿಂದ ಇಂದು ಮಧ್ಯಾಹ್ನ ಬೆಂಗಳೂರಿಗೆ ವಾಪಸಾದ ಬಳಿಕ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ನಾಗೇಂದ್ರ, ತಮ್ಮ ವಿರುದ್ಧದ ಆರೋಪಗಳು ಹಾಗೂ ನಡೆದ ಬೆಳವಣಿಗೆಗಳ ಕುರಿತು ಮಾತನಾಡಿದರು. ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “ಮನುವಾದಿಗಳ ಕುತಂತ್ರದಿಂದ ನಾನು ಮೂರು ತಿಂಗಳು ಜೈಲಿಗೆ ಹೋಗಿದ್ದೆ” ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣಕಾಸು ಅಕ್ರಮದ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಪ್ರಕರಣದ ತನಿಖೆ ತೀವ್ರಗೊಂಡ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ಸಚಿವ ಸ್ಥಾನವೂ ವಿವಾದದ ಕೇಂದ್ರಬಿಂದುವಾಗಿತ್ತು. ಪ್ರತಿಪಕ್ಷ ಬಿಜೆಪಿ ನಾಗೇಂದ್ರ ಅವರ ರಾಜೀನಾಮೆಗೆ ನಿರಂತರವಾಗಿ ಒತ್ತಾಯಿಸುತ್ತಿತ್ತು.

ದೆಹಲಿಯಲ್ಲಿ ಹೈಕಮಾಂಡ್ ಜೊತೆ ಡಿಕೆಶಿ ಚರ್ಚೆ : ಇದೇ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ನಾಗೇಂದ್ರ ರಾಜೀನಾಮೆ ಕುರಿತು ಮಹತ್ವದ ಸಮಾಲೋಚನೆ ನಡೆಸಿದ್ದರು. ಪಕ್ಷ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎಂಬ ಸಂದೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ವರಿಷ್ಠರೊಂದಿಗೆ ಚರ್ಚೆಯ ಬಳಿಕ ನೀಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಪ್ರತಿಭಟನೆಗೆ ರಾಜಕೀಯ ತಿರುವು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮದ ಆರೋಪ ಹೊರಬಿದ್ದ ಬಳಿಕ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿತ್ತು. ವಿಧಾನಮಂಡಲದ ಅಧಿವೇಶನದಲ್ಲೂ ಈ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿತ್ತು.

ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ನಾಗೇಂದ್ರ ಅವರ ರಾಜೀನಾಮೆಯಿಂದ ಬಿಜೆಪಿ ಹೋರಾಟಕ್ಕೆ ರಾಜಕೀಯವಾಗಿ ಬಲ ಸಿಕ್ಕಂತಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಆದರೆ ತಮ್ಮ ರಾಜೀನಾಮೆಯ ಸಂದರ್ಭದಲ್ಲಿ ನಾಗೇಂದ್ರ ಅವರು ತಮ್ಮ ವಿರುದ್ಧದ ಆರೋಪಗಳನ್ನು ರಾಜಕೀಯ ಪಿತೂರಿಗೆ ಜೋಡಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವುದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ನಾಗೇಂದ್ರ ಅವರ ರಾಜೀನಾಮೆಯೊಂದಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣ ಮತ್ತಷ್ಟು ರಾಜಕೀಯ ಮಹತ್ವ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ತನಿಖೆ ಹಾಗೂ ಸರ್ಕಾರದ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.

ಹೆಚ್ಚಿನ ಮಾಹಿತಿ ಅಪಡೆಟ್‌ ಆಗಲಿದೆ….