ಬಾಗಲಕೋಟೆ (ಕುಳಗೇರಿ ಕ್ರಾಸ್): “ಕರ್ನಾಟಕದಲ್ಲಿ ಕನ್ನಡ ಶಾಲೆಗಳ ಸ್ಥಿತಿ ದಯಣೀಯ ಪರಿಸ್ಥಿತಿಯಲ್ಲಿದೆ, ದಿನೇ ದಿನೆ ಎಲ್ಲೆಡೆ ಖಾಸಗಿ ಶಾಲೆಗಳ ಉಗಮದಿಂದ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ದುರ್ದೈವದ ಸಂಗತಿ. ಕನ್ನಡ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಎಲ್ಲ ಭಾಷೆಯನ್ನು ಗೌರವಿಸಿ ಆದರೆ ಕನ್ನಡವನ್ನು ಕಣ್ಣುಗಳಂತೆ ಕಾಪಾಡಬೇಕು” ಎಂದು ಅಣ್ಣಿಗೇರಿಯ ಪದ್ಮಶ್ರೀ ಪುರಸ್ಕೃತ ಡಾ. ಎ.ಐ. ನಡಕಟ್ಟಿನ ಹೇಳಿದರು.
ಭೈರನಹಟ್ಟಿ ಗ್ರಾಮದ ಶ್ರೀ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀ ದೊರೆಸ್ವಾಮಿ ವಿವಿದೋದ್ಧೇಶ ಟ್ರಸ್ಟ್ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 374ನೇ ಮಾಸಿಕ ಶಿವಾನುಭವ ಹಾಗೂ ಶಿಕ್ಷಕಕರ ದಿನಾಚರಣೆ ನಿಮಿತ್ತ ನಿವೃತ್ತ, ಸಾಧಕ ಶಿಕ್ಷಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
“ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಶಿಕ್ಷಕರ ಕೊಡುಗೆ ಅಮೂಲ್ಯವಾಗಿದೆ. ಸದೃಢ ಸಮಾಜಕ್ಕೆ ಶಿಕ್ಷಕರ ಬೋಧನೆ ಮತ್ತು ಮಾರ್ಗದರ್ಶನ ಅತ್ಯಗತ್ಯ. ಜಗತ್ತಿನಲ್ಲಿ ಯಾರಿಗೂ ಕೆಡಕನ್ನು ಬಯಸದ ಜೀವವೆಂದರೆ ಅದು ಗುರು ಮಾತ್ರ ಹೀಗಾಗಿ ಪ್ರತಿಯೊಬ್ಬರು ಶಿಕ್ಷಕರನ್ನು ಪ್ರೀತಿ ಗೌರವದಿಂದ ಕಾಣಬೇಕು” ಎಂದು ಕರೆಕೊಟ್ಟರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಶಿಕ್ಷಕಿ ವಿಜಯಲಕ್ಷ್ಮೀ ಘಾಳಿ ಮಾತನಾಡಿ, “ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು ಶಿಕ್ಷಕರಾದವರು ಅದನ್ನು ಶ್ರದ್ದೆಯಿಂದ ಪ್ರಾಮಾಣಿಕವಾಗಿ ಮಾಡಬೇಕು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕನ ಪಾತ್ರ ಅತ್ಯಂತ ಮಹತ್ವವಾದುದು. ಒಬ್ಬ ಶಿಕ್ಷಕ ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ 19 ಜನ ನಿವೃತ್ತ ಶಿಕ್ಷಕರಿಗೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು.