SK Home Ad
Home ನಮ್ಮ ಜಿಲ್ಲೆ ಬಾಗಲಕೋಟೆ ಬಾಗಲಕೋಟೆ ಜಿಲ್ಲೆಯಲ್ಲಿ ಬೆಂಕಿಯ ಕೆನ್ನಾಲಿಗೆ: 25ಕ್ಕೂ ಅಧಿಕ ಶೆಡ್‌ಗಳು ಭಸ್ಮ

ಬಾಗಲಕೋಟೆ ಜಿಲ್ಲೆಯಲ್ಲಿ ಬೆಂಕಿಯ ಕೆನ್ನಾಲಿಗೆ: 25ಕ್ಕೂ ಅಧಿಕ ಶೆಡ್‌ಗಳು ಭಸ್ಮ

0
61

ಬಾಗಲಕೋಟೆ: ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ 25ಕ್ಕೂ ಅಧಿಕ ಶೆಡ್‌ಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಶ್ರಾವಣ ಮಾಸದ ಪ್ರಯುಕ್ತ ಗ್ರಾಮದ ನಿವಾಸಿಗಳು ಪ್ರವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೆಂಕಿಯ ತೀವ್ರತೆಗೆ ಶೆಡ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅಲ್ಲಿದ್ದ ವಸ್ತುಗಳು ಹಾಗೂ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಒಂದು ಜಾನುವಾರಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದುಬಂದಿದೆ.

ಇದ್ದಲಗಿ ಗ್ರಾಮಸ್ಥರು ಸೂಕ್ತ ಪುನರ್ವಸತಿಗಾಗಿ ಕಳೆದೊಂದು ತಿಂಗಳಿನಿಂದ ಧರಣಿ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಶೆಡ್‌ಗಳಲ್ಲಿ ವಾಸಿಸುತ್ತಿದ್ದ ಕುಟುಂಬಗಳಿಗೆ ಈಗ ಅಗ್ನಿ ಅವಘಡ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ತಮ್ಮ ವಾಸದ ಸ್ಥಳ ಹಾಗೂ ಜೀವನೋಪಯೋಗಿ ವಸ್ತುಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಕ್ಷಣ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಆತಂಕಗೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಬಳಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಗಿದೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆ ಹಾಗೂ ತನಿಖೆಯ ಬಳಿಕವಷ್ಟೇ ಘಟನೆಗೆ ನಿಖರ ಕಾರಣ ತಿಳಿದುಬರಬೇಕಿದೆ.

ಒಟ್ಟಿನಲ್ಲಿ ಪುನರ್ವಸತಿಗಾಗಿ ಹೋರಾಟ ನಡೆಸುತ್ತಿದ್ದ ಇದ್ದಲಗಿ ಗ್ರಾಮಸ್ಥರಿಗೆ ಇದೀಗ ಸಂಭವಿಸಿರುವ ಅಗ್ನಿ ದುರಂತ ಮತ್ತೊಂದು ದೊಡ್ಡ ಆಘಾತ ನೀಡಿದೆ. ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ನೆರವು, ಪರಿಹಾರ ಹಾಗೂ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.