ಬಾಗಲಕೋಟೆ: ಬನಹಟ್ಟಿಯಲ್ಲೇ ಪ್ರಜಾಸೌಧ ನಿರ್ಮಿಸಬೇಕೆಂಬ ಆಗ್ರಹದೊಂದಿಗೆ ಕಳೆದ 29 ದಿನಗಳಿಂದ ನಿರಂತರ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರರಿಗೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ಪಂದನೆ ದೊರೆತಿದೆ.
ಬಾಗಲಕೋಟೆ ಜಿಲ್ಲಾ ಪ್ರವಾಸದ ಅಂಗವಾಗಿ ಶುಕ್ರವಾರ ಕೂಡಲಸಂಗಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಜಾಸೌಧ ಹೋರಾಟ ಸಮಿತಿ ಮುಖಂಡರು ಭೇಟಿಯಾಗಿ, ಬನಹಟ್ಟಿಯಲ್ಲಿ ನಡೆಯುತ್ತಿರುವ ನಿರಂತರ ಹೋರಾಟದ ಕುರಿತು ಸಮಗ್ರ ಮಾಹಿತಿ ನೀಡಿ, ಬನಹಟ್ಟಿಯಲ್ಲೇ ಪ್ರಜಾಸೌಧ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಿದರು.
ಬನಹಟ್ಟಿಯ ನಗರಸಭೆ ವ್ಯಾಪ್ತಿಯ CTS ನಂ. 8822ರಲ್ಲಿ 3.25 ಎಕರೆ ಪ್ರದೇಶದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ ಹೋರಾಟಗಾರರು, ಈಗಾಗಲೇ ಪ್ರಸ್ತಾಪಿಸಲಾಗಿರುವ ಸ್ಥಳದ ಕಾಮಗಾರಿಗೆ ಸಂಬಂಧಿಸಿದ ಆದೇಶವನ್ನು ಮರುಪರಿಶೀಲಿಸಿ, ಬನಹಟ್ಟಿಯ ಜನರ ಬಹುದಿನಗಳ ಬೇಡಿಕೆಗೆ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿಗಳ ಗಮನ ಸೆಳೆದರು.






















