ಬೆಳಗಾವಿ (ಸುವರ್ಣಸೌಧ): ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಕ್ಯತೆ ಮತ್ತು ಸ್ವಾಭಿಮಾನದ ಸಂಕೇತವಾದ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಅಪೂರ್ವ ಖಾದಿ ಧ್ವಜದ ನಿರ್ಮಾಣದ ಹಿಂದೆ ಕರ್ನಾಟಕದ ಕಲಬುರಗಿ ಜಿಲ್ಲೆಯ ಕಾಮಲಾಪುರದ ಒಂದು ಕುಟುಂಬದ ವೈಯಕ್ತಿಕ ಪರಿಶ್ರಮ ಮತ್ತು ದೇಶಭಕ್ತಿ ಆಸಕ್ತಿಯಿಂದ ಮಾಡಿಸಿದ್ದಾರೆ. ವಿನೋದ್ ಕುಮಾರ್ ರೇವಪ್ಪ ಬಮ್ಮನ್ ಅವರ ಕುಟುಂಬಸ್ಥರು ಸ್ವಯಂಪ್ರೇರಿತೆಯಿಂದ ಈ ಭವ್ಯ ಧ್ವಜ ತಯಾರಿಸಿದ್ದು, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಿಂದ (ಕೆವಿಐಸಿ) ಪ್ರಮಾಣೀಕರಿಸಲ್ಪಟ್ಟ ಸಾವೇ ಸಂಪ್ರದಾಯಿಕ ಕೈಮಗ್ಗದ ನೂಲಿನಿಂದ ನೇಯಲಾದ ಬಟ್ಟೆ. ಇದು ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ಸ್ವದೇಶಿ ಚಳುವಳಿಯೊಂದಿಗೆ ಗಾಢವಾಗಿ ಬೆಸೆದುಕೊಂಡಿದೆ. ಈಗ, ಅದೇ ಖಾದಿಯಿಂದ ರಚಿಸಲ್ಪಟ್ಟ ಈ ಭವ್ಯ ಧ್ವಜ ದೇಶದ ಸ್ವಾಭಿಮಾನವನ್ನು ಪುನಃ ದೊಡ್ಡ ಮಟ್ಟದಲ್ಲಿ ಎತ್ತಿಹಿಡಿದಿದೆ.
ಇದು ಮಹಾತ್ಮಾ ಗಾಂಧೀಜಿಯವರ ‘ಸ್ವದೇಶಿ’ ಮತ್ತು ‘ಸ್ವಾವಲಂಬನೆಯ’ ಸಿದ್ಧಾಂತಗಳನ್ನು, ಜೊತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ‘ಭಾರತದ ಐಕ್ಯತೆ’ಯ ದೃಷ್ಟಿಯನ್ನು ನೆನಪಿಸುತ್ತದೆ.
ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ರೂಪಿಸಲಾಯಿತು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಕೇಸರಿ ಬಣ್ಣವು ಶಕ್ತಿ, ಸ್ಥೈರ್ಯ ಹಾಗೂ ತ್ಯಾಗವನ್ನು ಪ್ರತಿಬಿಂಬಿಸುತ್ತದೆ. ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ.
ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ, ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗ – ಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ.
ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ.
ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಸಮಸ್ತ ಕನ್ನಡಿಗರ ಪರವಾಗಿ ಮತ್ತೊಮ್ಮೆ ಧನ್ಯವಾದ ಅರ್ಪಿಸುತ್ತೇನೆ ಎಂದರು.





















