ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು.
ಬೆಳಗ್ಗೆ ಬೆಂಗಳೂರಿನಿಂದ ಬಳ್ಳಾರಿಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಮಧ್ಯಾಹ್ನ ರಾಜಶೇಖರ್ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮೃತ ರಾಜಶೇಖರ್ ಅವರ ಕುಟುಂಬದ ದುಃಖದಲ್ಲಿ ತಾವು ಕೂಡ ಭಾಗಿಯಾಗಿದ್ದಾಗಿ ಹೇಳಿ, ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಕುಟುಂಬದ ಜೊತೆಗಿದೆ ಎಂಬ ಭರವಸೆಯನ್ನು ನೀಡಿದರು.
ಇದನ್ನೂ ಓದಿ: ಧಾರವಾಡ ಹೈಕೋರ್ಟ್ಗೆ ಬಾಂಬ್ ಬೆದರಿಕೆ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, “ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ದುರ್ಘಟನೆ ಸಂಭವಿಸಿದೆ. ಇದು ಅತ್ಯಂತ ನೋವಿನ ಸಂಗತಿ. ಈ ಘಟನೆ ನಡೆಯಬಾರದಾಗಿತ್ತು. ಮೃತ ರಾಜಶೇಖರ್ ಅವರ ಕುಟುಂಬದ ನೋವನ್ನು ನಾನು ಹಂಚಿಕೊಳ್ಳುತ್ತಿದ್ದೇನೆ. ಈ ಕುಟುಂಬದ ಜೊತೆ ಪಕ್ಷ ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಲು ಇಲ್ಲಿಗೆ ಬಂದಿದ್ದೇನೆ,” ಎಂದು ಹೇಳಿದರು.
ಮೃತರ ಕುಟುಂಬ ಸರ್ಕಾರಿ ಉದ್ಯೋಗ ನೀಡುವಂತೆ ಬೇಡಿಕೆ ಇಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಕುಟುಂಬದ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಕಾನೂನು ಚೌಕಟ್ಟು ಮತ್ತು ಪ್ರಕ್ರಿಯೆ ಅನುಸರಿಸಿ ಸರ್ಕಾರಿ ನೌಕರಿ ಒದಗಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇವೆ,” ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ ತೀವ್ರಗೊಂಡ ತನಿಖೆ
ಘಟನೆಯ ಕುರಿತಂತೆ ಉಳಿದ ರಾಜಕೀಯ ವಿಚಾರಗಳ ಬಗ್ಗೆ ಈಗಲೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ ಡಿಕೆ ಶಿವಕುಮಾರ್, ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ ಬಳಿಕ ಮುಂದಿನ ನಿಲುವು ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಸಹ ಉಪಸ್ಥಿತರಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇದನ್ನೂ ಓದಿ: ಐದು ವರ್ಷ ನಾನೇ ಸಿಎಂ: ಹೈಕಮಾಂಡ್ ತೀರ್ಮಾನ ಅಂತಿಮ
ನಗರದಲ್ಲಿ ನಡೆದ ಈ ಗಲಭೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಪ್ರಕರಣ ಬಳ್ಳಾರಿಯಲ್ಲಿ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ತನಿಖೆ ಮುಂದುವರಿದಿದೆ.























