ತುಂಗಭದ್ರಾ ನದಿಯಲ್ಲಿ ಕಾಲುಜಾರಿ ತಾಯಿ-ಮಗಳು ನಾಪತ್ತೆ; ಹಂಪಿಯಲ್ಲಿ ಶೋಧ ಕಾರ್ಯಾಚರಣೆ
ಹೊಸಪೇಟೆ: ಪ್ರವಾಸಕ್ಕೆಂದು ಹಂಪಿಗೆ ಬಂದಿದ್ದ ತಾಯಿ-ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದ ಶಾಹೀನ್ (38) ಹಾಗೂ ಅವರ ಪುತ್ರಿ ಯಾಸ್ಮೀನ್ (13) ಎಂದು ಗುರುತಿಸಲಾಗಿದೆ.
ಸ್ನಾನಕ್ಕೆ ತೆರಳಿದ್ದ ವೇಳೆ ಘಟನೆ : ಶಾಹೀನ್ ಹಾಗೂ ಯಾಸ್ಮೀನ್ ಅವರು ಸಂಬಂಧಿಕರೊಂದಿಗೆ ಹಂಪಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸದ ವೇಳೆ ಅಡುಗೆ ಮಾಡಿಕೊಂಡು ಬಳಿಕ ತುಂಗಭದ್ರಾ ನದಿಯ ಸ್ನಾನಘಟ್ಟಕ್ಕೆ ಸ್ನಾನಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ತಾಯಿ-ಮಗಳು ಕಾಲುಜಾರಿ ನದಿಗೆ ಬಿದ್ದು ನೀರಿನಲ್ಲಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಿಕರು ಆತಂಕಗೊಂಡಿದ್ದು, ತಾಯಿ-ಮಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಪೊಲೀಸರಿಂದ ಶೋಧ ಕಾರ್ಯಾಚರಣೆ : ವಿಷಯ ತಿಳಿದ ತಕ್ಷಣ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ನಾಪತ್ತೆಯಾದ ತಾಯಿ-ಮಗಳಿಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ನದಿಯ ನೀರಿನ ಹರಿವು ಹಾಗೂ ಆಳದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಗೆ ಸವಾಲು ಎದುರಾಗಿದೆ.
ಘಟನೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ನಾಪತ್ತೆಯಾದವರ ಪತ್ತೆಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.






















