ಆಳಂದ ಮತಗಳವು ಕೇಸಲ್ಲಿ ಗುತ್ತೇದಾರ್, ಪುತ್ರ ಆರೋಪಿ

0
1

ಬೆಂಗಳೂರು: ಕಳೆದ 2023ರ ವಿಧಾನಸಭೆ ಚುನಾವಣೆ ವೇಳೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಮಗ ಹರ್ಷಾನಂದ ಗುತ್ತೇದಾರ್ ಮತ್ತು ಅವರ ಆಪ್ತ ಸಹಾಯಕ ಸೇರಿದಂತೆ ಏಳು ಜನರನ್ನು ಹೆಸರಿಸಿ 22 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ. ವಿಶೇಷ ತನಿಖಾ ತಂಡ ಬೆಂಗಳೂರಿನ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಈ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.

5,994 ಮತದಾರರ ಹೆಸರುಗಳನ್ನು ತೆಗೆದುಹಾಕಲು ಮಾಡಿದ ಪ್ರಯತ್ನಗಳಿಗೆ ಸಂಬಂಧಿಸಿದಂತೆ ಈ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಮಗ ಹರ್ಷಾನಂದ ಗುತ್ತೇದಾರ್, ಅವರ ಆಪ್ತ ಕಾರ್ಯದರ್ಶಿ ತಿಪ್ಪೇರುದ್ರ, ಕಲಬುರಗಿ ಮೂಲದ ಮೂವರು ಡೇಟಾ ಸೆಂಟರ್ ನಿರ್ವಾಹಕರಾದ ಅಕ್ರಮ್ ಪಾಷಾ, ಮುಕರಾಮ್ ಪಾಷಾ ಮತ್ತು ಮೊಹಮ್ಮದ್ ಅಷ್ಪಾಕ್ ಹಾಗೂ ಪಶ್ಚಿಮ ಬಂಗಾಳದ ಬಾಪಿ ಅದ್ಯಾ ಅವರ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ ಆದ್ಯ ಎಂಬುವರನ್ನು ಮೊದಲಿಗೆ ಬಂಧನ ಮಾಡಲಾಗಿತ್ತು. ಈ ಆದ್ಯ ಒಟಿಪಿ ಬೈಪಾಸ್ ಸೌಲಭ್ಯವನ್ನು ಒದಗಿಸಲು ಅಮೆರಿಕ ಮೂಲದ ವೇದಿಕೆಯೊಂದಿಗೆ ಸಂಪರ್ಕ ಹೊಂದಿದ್ದ ಒಟಿಪಿ ಬಜಾರ್ ಎಂಬ ವೆಬ್‌ಸೈಟ್ ಅನ್ನು ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ನಡುವೆ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಕೂಡ ಮಾಡಲಾಗಿದೆ.

ಇದನ್ನೂ ಓದಿ: ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಹಾಕುವೆ

2023 ಫೆಬ್ರವರಿ ತಿಂಗಳಲ್ಲಿ 6,018 ಮತಗಳ ರದ್ದತಿಗಾಗಿ ಅಕ್ರಮ್ ಪಾಷಾ ಹಾಗೂ ಆತನ ಸಹೋದರರು ಅರ್ಜಿ ಸಲ್ಲಿಸಿದ್ದರು. ಒಟಿಪಿ ಬಳಸಿಕೊಂಡು ಮತಪಟ್ಟಿಯಿಂದ ಹೆಸರು ಡಿಲೀಟ್ ಮಾಡಲಾಗಿತ್ತು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಪಟ್ಟಂತೆ ಗುತ್ತೇದಾರ್ ಅವರ ಮನೆ ಹಾಗೂ ಇನ್ನಿತರ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ವಿಚಾರಣೆ ಸಹ ನಡೆಸಿತ್ತು.

ಪ್ರಕರಣದ ಹಿನ್ನೆಲೆ: ಆಳಂದ ಕ್ಷೇತ್ರದಲ್ಲಿ 2023ರಲ್ಲಿ ಮತಗಳವು ನಡೆದಿದೆ ಎಂದು ಆರೋಪಿಸಿ ಶಾಸಕ ಬಿ.ಆರ್. ಪಾಟೀಲ್ ದೂರು ನೀಡಿದ್ದರು. ಅಲ್ಲದೇ ರಾಷ್ಟ್ರ ಮಟ್ಟದಲ್ಲಿ ರಾಹುಲ್ ಗಾಂಧಿ ಅವರು ಆಳಂದದಲ್ಲಿ ವೋಟ್ ಚೋರಿ ನಡೆದಿದೆ ಎಂದು ಆಪಾದಿಸಿದ್ದರು. ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲ ಎಸ್‌ಐಟಿ ರಚಿಸಿತ್ತು.

Previous articleಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಹಾಕುವೆ