SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಎಸ್‌ಐಆರ್‌ನಲ್ಲಿ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಲಿ

ಎಸ್‌ಐಆರ್‌ನಲ್ಲಿ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಲಿ

0
25

ಬೆಂಗಳೂರು: “ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು” ಎಂದು ನಾಗರಿಕ ಸಂಘಟನೆಗಳು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದವು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಹುಭಾಷ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ʻಎದ್ದೇಳು ಕರ್ನಾಟಕʼ ಮತ್ತಿತರ ಸಂಘಟನೆಗಳ ಪ್ರತಿನಿಧಿಗಳು ಭೇಟಿ ಮಾಡಿ ಎಸ್‌ಐಆರ್ ಲೋಪದೋಷದ ಬಗ್ಗೆ ಸಮಾಲೋಚನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು.

“ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಪ್ರಮಾಣದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕಿತ್ತೊಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 1.09 ಕೋಟಿ ಮತದಾರರು ಎಎಸ್ ಡಿಡಿಓ ಪಟ್ಟಿಯಲ್ಲಿದ್ದು, ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಹೆಚ್ಚಿನ ಪ್ರಮಾಣದ ಹೆಸರುಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ರಾಜ್ಯದ ಸುಮಾರು 3,000 ಬೂತ್‌ಗಳಲ್ಲಿ ಡಿಲೀಷನ್ ಪ್ರಮಾಣ ಶೇ. 60ಕ್ಕಿಂತ ಹೆಚ್ಚಾಗಿದೆ” ಎಂದು ವಿವರಿಸಿದರು.

ಎಸ್‌ಐಆರ್ ಪ್ರಕ್ರಿಯೆಯನ್ನು ನ್ಯಾಯ ಸಮ್ಮತವಾಗಿ ನಡೆಸಲು ಮುಖ್ಯಮಂತ್ರಿಗಳ ಮುಂದೆ ಹಲವು ಬೇಡಿಕೆಗಳನ್ನು ಇಟ್ಟ ಪ್ರತಿನಿಧಿಗಳು, ಎಸ್ಐಆರ್ ಪ್ರಕ್ರಿಯೆಯನ್ನು ಕನಿಷ್ಟ 3 ತಿಂಗಳು ವಿಸ್ತರಿಸಿ, ಪ್ರಕ್ರಿಯೆ ಪೂರ್ಣಗೊಳಿಸಲು ಒಂದು ವರ್ಷ ಕಾಲವಕಾಶ ನೀಡುವಂತೆ ಚುನಾವಣಾ ಆಯೋಗವನ್ನು ರಾಜ್ಯ ಸರ್ಕಾರ ಒತ್ತಾಯಿಸಬೇಕು ಎಂದರು.

“ಸ್ಥಳಾಂತರ (Shifted), ಗೈರು (Absent) ಮತ್ತು ಇತರರು (Others) ವರ್ಗದಲ್ಲಿರುವವರನ್ನು ತಕ್ಷಣವೇ ಡಿಲೀಟ್ ಮಾಡದೆ, BLOಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸಬೇಕು. ಸ್ಥಳಾಂತರಗೊಂಡ ಮತದಾರರಿಗೆ ಮತ ವರ್ಗಾವಣೆಗೆ ಅಗತ್ಯವಿರುವ ಫಾರ್ಮ್‌ ಹಾಗೂ ಹೊಸ ಮತದಾರರಿಗೆ ನೋಂದಣಿಗೆ ಅವಕಾಶ ಒದಗಿಸಬೇಕು” ಎಂದು ಮನವಿ ಮಾಡಿದರು.

“ಅರ್ಹ ಮತದಾರರನ್ನು ಮತಪಟ್ಟಿಯಲ್ಲಿ ಉಳಿಸಿಕೊಳ್ಳಲು ರಾಜ್ಯ ಸರ್ಕಾರವೇ ಮುಂದಾಗಬೇಕು. ಸರ್ಕಾರದ ಸಿಬ್ಬಂದಿ ಮನೆಮನೆಗೆ ತೆರಳಿ ಮಾಹಿತಿ ನೀಡಬೇಕು ಹಾಗೂ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಬೇಕು” ಎಂದು ಸಲಹೆ ನೀಡಲಾಗಿದೆ.

“ಚುನಾವಣಾ ಆಯೋಗ ಕ್ರಮ ಕೈಗೊಳ್ಳಲು ಒಪ್ಪದಿದ್ದರೆ ವಿಧಾನಸಭೆಯಲ್ಲಿ ಈ ಕುರಿತು ಚರ್ಚಿಸಿ, ಸರ್ಕಾರವೇ ನಿರ್ಣಯ ಕೈಗೊಂಡು ಕೇಂದ್ರ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಬೇಕು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವ ಮೂಲಕ ರಾಜ್ಯದ ಹಿತ ಕಾಪಾಡಬೇಕು” ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿವೆ.