SK Home Ad
Home ನಮ್ಮ ಜಿಲ್ಲೆ ಬೀದರ್ ಆಡಳಿತಾತ್ಮಕ ಪಾರದರ್ಶಕತೆಗೆ ನಮ್ಮ ಸರ್ಕಾರ ಬದ್ಧ

ಆಡಳಿತಾತ್ಮಕ ಪಾರದರ್ಶಕತೆಗೆ ನಮ್ಮ ಸರ್ಕಾರ ಬದ್ಧ

0
61

ಬೀದರ್: ಬೀದರ್ ನಗರದ ಸಮಗ್ರ ಅಭಿವೃದ್ಧಿ, ನಾಗರಿಕರ ಮೂಲಭೂತ ಸೌಕರ್ಯ ಹಾಗೂ ಆಡಳಿತಾತ್ಮಕ ಪಾರದರ್ಶಕತೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜರುಗಿದ ಬೀದರ್ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಿ. ಸೇವೆಯಲ್ಲಿರುವ ಪೌರ ಕಾರ್ಮಿಕರಿಗೆ ಅಗತ್ಯ ತರಬೇತಿ ನೀಡುವುದರ ಜೊತೆಗೆ, ಅವರಿಗೆ ಬೇಕಾದ ಎಲ್ಲಾ ಮೂಲಭೂತ ಅವಶ್ಯಕತೆಗಳನ್ನು ಯಾವುದೇ ಲೋಪವಿಲ್ಲದೆ ಪೂರೈಸಬೇಕು ಎಂದು ತಿಳಿಸಿದರು.

ಕಳೆದ ವರ್ಷದ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ತಕ್ಷಣವೇ ಮುಗಿಸಬೇಕು. ಯುಐಡಿಎಫ್ (UIDF) ಯೋಜನೆ ಅಡಿಯಲ್ಲಿ ರೂ. 45 ಕೋಟಿ ವೆಚ್ಚದ ಕಾಮಗಾರಿಗಳನ್ನು ನಿಗದಿತ ಬಜೆಟ್‌ನಲ್ಲಿ ಮಾಡಲು ಸಾಧ್ಯವಾಗದಿದ್ದರೆ, ತಕ್ಷಣವೇ ಮರು ಅಂದಾಜು ಮಾಡಿ ಪ್ರಸ್ತಾವನೆ ಸಲ್ಲಿಸಿ. ಹಾಗೆಯೇ, ಮುಂಬರುವ 2056ರ ವರ್ಷದ ಜನಸಂಖ್ಯೆ ಮತ್ತು ನೀರಿನ ಅಗತ್ಯತೆಯನ್ನು ಕಲ್ಪಿಸಿಕೊಂಡು, ಅದಕ್ಕೆ ತಕ್ಕಂತೆ ನೀರಿನ ಸಂಸ್ಕರಣಾ ಘಟಕಗಳನ್ನು ನಿರ್ಮಿಸಬೇಕು. ನಗರದಲ್ಲಿ ಯುಜಿಡಿ ಕಾಮಗಾರಿ ಶೇಕಡಾ 100 ರಷ್ಟು ಪೂರ್ಣಗೊಳ್ಳಬೇಕು ಎಂದರು.

ನಗರದಲ್ಲಿ ನಿರ್ಮಿಸಲಾಗುವ ಮಲ್ಟಿಪಲ್ ಕಮರ್ಷಿಯಲ್ ಕಾಂಪ್ಲೆಕ್ಸ್‌ಗಳಲ್ಲಿ ಕಡ್ಡಾಯವಾಗಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಿಸಬೇಕು. ರಸ್ತೆ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ಮಾರುಕಟ್ಟೆ ನಿರ್ಮಿಸಿಕೊಡಬೇಕು. ಸ್ಥಳೀಯ ಬಿದರಿ ಕಲೆಯನ್ನು ಪ್ರೋತ್ಸಾಹಿಸಲು ಕಾರ್ಖಾನೆ ಸ್ಥಾಪಿಸುವ ಕುರಿತು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ನಗರದ ಪ್ರತಿಯೊಂದು ಆಸ್ತಿಯ ಜಿಪಿಎಸ್ ಮ್ಯಾಪಿಂಗ್ ಕಡ್ಡಾಯವಾಗಿ ಆಗಬೇಕು. ಸಾರ್ವಜನಿಕರಿಗೆ ಯಾವುದೇ ಅಲೆದಾಟವಿಲ್ಲದೆ ಸರಿಯಾದ ಸಮಯಕ್ಕೆ ʻಈ-ಖಾತಾʼ ತಲುಪಿಸಬೇಕು. ಅಧಿಕೃತ ಟ್ರೇಡ್ ಲೈಸೆನ್ಸ್ ಇಲ್ಲದೆ ಬಿಸಿನೆಸ್ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ನೈರ್ಮಲ್ಯಕ್ಕಾಗಿ ತಕ್ಷಣವೇ ʻವೇಸ್ಟ್ ಪ್ರೊಸೆಸಿಂಗ್ ಯೂನಿಟ್ʼ ತೆರೆಯಬೇಕು ಹಾಗೂ ಕಸ ಬೇರ್ಪಡಿಸುವ ಮೆಷಿನ್‌ಗಳನ್ನು ಖರೀದಿಸಬೇಕು. ಸಾರ್ವಜನಿಕ ಶೌಚಾಲಯಗಳನ್ನು ಅತ್ಯಂತ ಸ್ವಚ್ಛವಾಗಿ ಮತ್ತು ಉತ್ತಮ ಸ್ಥಿತಿಯಲ್ಲಿಡಬೇಕು. ಸಾರ್ವಜನಿಕರಲ್ಲಿ ಕಸ ನಿರ್ವಹಣೆ ಕುರಿತು ಅರಿವು ಮೂಡಿಸಲು ಐಇಸಿ ಚಟುವಟಿಕೆಗಳನ್ನು ಹೆಚ್ಚಾಗಿ ನಡೆಸಿ ಎಂದು ತಿಳಿಸಿದರು.

ರಾಜ್ಯ ಸಂಪುಟ ಸಭೆಯಲ್ಲಿ ಮಹಾನಗರ ಪಾಲಿಕೆಗೆ ಒಟ್ಟಾರೆ ಅಭಿವೃದ್ಧಿಗಾಗಿ ರೂ. 200 ಕೋಟಿ ನೀಡಲು ತೀರ್ಮಾನಿಸಲಾಗಿದೆ. ಈ ಅನುದಾನವನ್ನು ಸೂಕ್ತವಾಗಿ ಬಳಸಿಕೊಂಡು ನಗರದ ಚಿತ್ರಣ ಬದಲಾಯಿಸುವ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರಾದ ರಹೀಮ್ ಖಾನ್, ಬೀದರ್ ಮಹಾನಗರ ಪಾಲಿಕೆ ಆಯುಕ್ತರಾದ ಮುಕುಲ್ ಜೈನ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.